ADVERTISEMENT

‘ನರೇಗಾದಡಿ ಗ್ರಾಮೀಣ ಜನರಿಗೆ ಕೆಲಸ ಒದಗಿಸಿ’

ಜಿಲ್ಲಾ ಪಂಚಾಯಿತಿ ಸಿಇಒ ಸೋಮಶೇಖರ್ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 14:41 IST
Last Updated 12 ಸೆಪ್ಟೆಂಬರ್ 2024, 14:41 IST
ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಹಾಗೂ ಎನ್.ಮಹಾದೇವಪುರ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿದ ಸಿಇಒ ಸೋಮಶೇಖರ್ ಪರಿಶೀಲನೆ ನಡೆಸಿದರು
ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಹಾಗೂ ಎನ್.ಮಹಾದೇವಪುರ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿದ ಸಿಇಒ ಸೋಮಶೇಖರ್ ಪರಿಶೀಲನೆ ನಡೆಸಿದರು   

ಚಳ್ಳಕೆರೆ: ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಜಾಬ್‍ಕಾರ್ಡ್‍ದಾರರಿಗೆ ತಪ್ಪದೆ ಕೂಲಿ ಕೆಲಸ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸೋಮಶೇಖರ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ತಾಲ್ಲೂಕಿನ ದೊಡ್ಡೇರಿ ಹಾಗೂ ಎನ್.ಮಹಾದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. 

ಕೆರೆ ಹೂಳೆತ್ತುವ ಕಾರ್ಯ, ಕಾಲುವೆ ದುರಸ್ತಿ, ಚೆಕ್‍ಡ್ಯಾಂ, ಕೃಷಿಹೊಂಡ, ಬದು ನಿರ್ಮಾಣ ಮುಂತಾದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಮಾನವ ದಿನಗಳನ್ನು ಹೆಚ್ಚಿಸಬೇಕು ಎಂದು ಹೇಳಿದರು.

ADVERTISEMENT

ತೋಟಗಾರಿಕೆ ಇಲಾಖೆಯಿಂದ ದೊರೆಯುವ ಸಹಾಯಧನ ಬಳಕೆ ಮಾಡಿಕೊಂಡು ನರೇಗಾ ಯೋಜನೆಯಡಿ ದಾಳಿಂಬೆ, ಪಪ್ಪಾಯ, ಮೋಸಂಬಿ ಮುಂತಾದ ಬೆಳೆಗಳ ಜತೆಗೆ ಹೂವಿನ ತೋಟ ಬೆಳೆಸಲು ಅವಕಾಶವಿದೆ. ಆಸಕ್ತ ರೈತರು ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಸಲಹೆ ನೀಡಿದರು. 

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ, ಗ್ರಾಮೀಣ ಜನರ ಶುದ್ಧ ಕುಡಿಯುವ ನೀರು ಪೂರೈಕೆ, ಕಸವಿಲೇವಾರಿ, ಚರಂಡಿ ಸ್ವಚ್ಛತೆ, ಬೀದಿದೀಪ, ಇ-ಸ್ವತ್ತು ಖಾತೆ ಆದ್ಯತೆ ನೀಡಬೇಕು ಎಂದು ಹೇಳಿದರು.

ನರೇಗಾ ಸಹಾಯಕ ನಿರ್ದೇಶಕ ಸಂತೋಷ್, ಎಡಿಪಿಸಿ ಮೋಹನ್‍ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಪ್ಪೇಸ್ವಾಮಿ, ಗ್ರಾಮಾಭಿವೃದ್ಧಿ ಅಧಿಕಾರಿ ರಾಘವೇಂದ್ರ, ಗ್ರಾಮ ಕಾಯಕ ಮಿತ್ರ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.