ಪ್ರಜಾವಾಣಿ ವಾರ್ತೆ
ಚಳ್ಳಕೆರೆ: ಮಳೆ ಅಭಾವದ ಪರಿಣಾಮವಾಗಿ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಶೇಂಗಾ, ತೊಗರಿ ಮುಂತಾದ ಬೆಳೆ ಸಂಪೂರ್ಣವಾಗಿ ವಿಫಲವಾಗಿದೆ. ಹೀಗಾಗಿ ಕೂಡಲೆ ಬರಪೀಡಿತ ಪ್ರದೇಶವೆಂದು ಘೋಷಿಸುವುದರ ಜತೆಗೆ ತಾಲ್ಲೂಕಿನ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ರೈತ ಮುಖಂಡ ಕೆ.ಪಿ.ಭೂತಯ್ಯ ಸರ್ಕಾರವನ್ನು ಒತ್ತಾಯಿಸಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಮಧ್ಯಂತರ ಬೆಳೆಪರಿಹಾರ ಕುರಿತ ವಿಮಾ ಕಂಪನಿ, ರೈತರು ಮತ್ತು ಕೃಷಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
.ಬಿತ್ತನೆ ಬೀಜ, ಗೊಬ್ಬರ ಹಾಗೂ ಬೇಸಾಯಕ್ಕೆ ಹಾಕಿದ ಬಂಡವಾಳದಲ್ಲಿ ಬಿಡಿಗಾಸು ಕೂಡ ದೊರೆಯುತ್ತಿಲ್ಲ. ಇದರಿಂದಾಗಿ ರೈತರು ಮತ್ತಷ್ಟು ಸಾಲದ ಸುಳಿಗೆ ಸಿಲುಕುವಂತಾಗಿದೆ. ಹಾಗಾಗಿ ಕೇಂದ್ರದ ನೀತಿಯಂತೆ ಬೆಳೆವಿಮೆ ಜಾರಿಗೊಳಿಸುವುದಲ್ಲದೆ ತಕ್ಷಣವೇ ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ಕೃಷಿ ಸಚಿವರಲ್ಲಿ ಮನವಿ ಮಾಡಿದರು.
ತಹಶೀಲ್ದಾರ್ ಮಾತನಾಡಿ, ತಾಲ್ಲೂಕಿನಲ್ಲಿ ಈ ಬಾರಿ ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ ರೈತರಿಗೆ ತುಂಬಾ ತೊಂದರೆಯಾಗಿದೆ. ಬೆಳೆಪರಿಹಾರ ತರಿಸಿಕೊಡಲು ಬೆಳೆ ವಿಫಲತೆಯ ಯಥಾವತ್ತಾದ ಸಮೀಕ್ಷಾ ವರದಿ ಸರ್ಕಾರಕ್ಕೆ ಕಳುಹಿಸಿಕೊಡಲು ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ರೈತ ಮುಖಂಡ ಸೋಮಗುದ್ದು ರಂಗಸ್ವಾಮಿ ಮಾತನಾಡಿ, ಕೃಷಿಪತ್ತಿನ ಸಹಕಾರ ಸಂಘ, ರಾಷ್ಟ್ರೀಕೃತ ಬ್ಯಾಂಕ್ನಲ್ಲಿನ ರೈತರ ಸಾಲ ಮನ್ನಾ ಮಾಡುವ ಮೂಲಕ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಹೇಳಿದರು.
ಕೃಷಿ ಸಹಾಯಕ ನಿರ್ದೇಶಕ ಅಶೋಕ್ ಮಾತನಾಡಿದರು.
ರೈತ ಸಂಘದ ಹಿರಿಯ ರಡ್ಡಿಹಳ್ಳಿ ವೀರಣ್ಣ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಸಿ.ಶಿವಲಿಂಗಪ್ಪ, ನಾಗರಾಜ, ತಿಪ್ಪೇಸ್ವಾಮಿ, ರಾಜಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.