ADVERTISEMENT

ಬ್ಯಾನರ್‌ಗಳಿಂದ ಮಕ್ಕಳ ರಕ್ಷಣೆ ಸಾಧ್ಯವಿಲ್ಲ: ಕೆ.ಟಿ. ತಿಪ್ಪೇಸ್ವಾಮಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 6:41 IST
Last Updated 18 ಫೆಬ್ರುವರಿ 2026, 6:41 IST
ಚಿತ್ರದುರ್ಗದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಿಷನ್‌ ವಾತ್ಸಲ್ಯ ಯೋಜನೆ ಕುರಿತ ತರಬೇತಿಯನ್ನು ಸದಸ್ಯ ಕೆ.ಟಿ. ತಿಪ್ಪೇಸ್ವಾಮಿ ಉದ್ಘಾಟಿಸಿದರು
ಚಿತ್ರದುರ್ಗದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಿಷನ್‌ ವಾತ್ಸಲ್ಯ ಯೋಜನೆ ಕುರಿತ ತರಬೇತಿಯನ್ನು ಸದಸ್ಯ ಕೆ.ಟಿ. ತಿಪ್ಪೇಸ್ವಾಮಿ ಉದ್ಘಾಟಿಸಿದರು   

ಚಿತ್ರದುರ್ಗ: ‘ಕೇವಲ ಬಣ್ಣದ ಚಿತ್ತಾರ, ಬರಹ, ಬ್ಯಾನರ್‌ಗಳಿಂದ ಪೊಲೀಸ್‌ ಠಾಣೆಗಳು ಮಕ್ಕಳ ರಕ್ಷಣೆ ಮತ್ತು ಸ್ನೇಹಿಯಾಗಲು ಸಾಧ್ಯವಿಲ್ಲ. ಠಾಣೆಗೆ ಬರುವ ಮಕ್ಕಳೊಂದಿಗಿನ ಅಧಿಕಾರಿಗಳ ವರ್ತನೆ, ಮನೋಭಾವ ಹೇಗಿರುತ್ತದೆ ಎಂಬುದು ಮುಖ್ಯವಾಗುತ್ತದೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ. ತಿಪ್ಪೇಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಮಿಷನ್‌ ವಾತ್ಸಲ್ಯ ಯೋಜನೆ ಕುರಿತ ತರಬೇತಿ ಉದ್ಘಾಟಿಸಿ ಮಾತನಾಡಿದರು.

‘ಅಧಿಕಾರಿಗಳು ಸಂಕಷ್ಟದಲ್ಲಿರುವ ಮಕ್ಕಳನ್ನು ಕಂಡಾಗ ತಮ್ಮದೇ ಮಗು ಎಂಬ ಭಾವನೆಯಿಂದ ಸ್ಪಂದಿಸಿದಾಗ ಮಾತ್ರ ವ್ಯವಸ್ಥೆ ಸುಧಾರಿಸಲು ಸಾಧ್ಯ’ ಎಂದರು.

ADVERTISEMENT

‘ಮಕ್ಕಳಿಗೆ ಸಂಬಂಧಪಟ್ಟ ಪ್ರಕರಣಗಳನ್ನು ನಿರ್ವಹಿಸುವಾಗ ಅಧಿಕಾರಕ್ಕಿಂತ ಹೆಚ್ಚಾಗಿ ಸಂವೇದನಾಶೀಲತೆ ಮತ್ತು ಮಾನವೀಯತೆ ಮುಖ್ಯವಾಗುತ್ತದೆ’ ಎಂದು ತಿಳಿಸಿದರು.

‘ಒಂದು ಸಸಿಗೆ ನೀರು, ಗೊಬ್ಬರ ಮತ್ತು ಬೇಲಿ ಹಾಕಿ ರಕ್ಷಿಸಿದರೆ ಅದು ಹೇಗೆ ಭವಿಷ್ಯದಲ್ಲಿ ಹೆಮ್ಮರವಾಗಿ ಬೆಳೆಯುತ್ತದೆಯೋ, ಹಾಗೆಯೇ ಮಕ್ಕಳ ರಕ್ಷಣೆಯಲ್ಲಿ ವಿವಿಧ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಬೇಕು. ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಪೊಲೀಸ್‌ ಇಲಾಖೆ ಸಮನ್ವಯತೆಯಿಂದ ಕೆಲಸ ಮಾಡಿದರೆ ಮಾತ್ರ ಮಕ್ಕಳ ಹಕ್ಕು ಕಾಪಾಡಲು ಸಾಧ್ಯ’ ಎಂದರು.

‘ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 3,800ಕ್ಕೂ ಹೆಚ್ಚು ಬಾಲಗರ್ಭಿಣಿ ಪ್ರಕರಣಗಳು ವರದಿಯಾಗಿರುವುದು ಗಂಭೀರ ವಿಚಾರವಾಗಿದೆ. ಆದರೆ, ಇದರಲ್ಲಿ ಕೇವಲ ಶೇ.1 ರಿಂದ 2 ರಷ್ಟು ಪ್ರಕರಣಗಳಲ್ಲಿ ಮಾತ್ರ ಎಫ್‌ಐಆರ್ ದಾಖಲಾಗಿದೆ. ಶೇ 10 ರಷ್ಟು ಪ್ರಕರಣಗಳು ಮಾತ್ರ ಇಲಾಖೆಯ ಗಮನಕ್ಕೆ ಬಂದಿವೆ’ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್‌. ವಿಜಯ ಕುಮಾರ್‌ ಕಳವಳ ವ್ಯಕ್ತಪಡಿಸಿದರು.

‘ಜಿಲ್ಲೆಯಾದ್ಯಂತ 18 ವರ್ಷದೊಳಗಿನ ಅಂದಾಜು 54,000 ಹೆಣ್ಣುಮಕ್ಕಳ ಸಮೀಕ್ಷೆ ನಡೆಸಲಾಗಿದ್ದು, ಪ್ರತಿ ಪೋಷಕರಿಂದ ನನ್ನ ಮಗಳಿಗೆ 18 ವರ್ಷ ತುಂಬುವವರೆಗೆ ಮದುವೆ ಮಾಡುವುದಿಲ್ಲ ಎಂದು ಲಿಖಿತವಾಗಿ ಮುಚ್ಚಳಿಕೆ ಪತ್ರಕ್ಕೆ ಸಹಿ ಪಡೆಯಲಾಗುತ್ತಿದೆ. ಒಂದು ವೇಳೆ ಕಾನೂನು ಮೀರಿ ಮದುವೆ ಮಾಡಿದರೆ ಅಂತಹ ಪೋಷಕರು ಮತ್ತು ಮದುವೆಗೆ ಸಹಕರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ’ ಎಂದರು.

‘ಬಾಲ್ಯ ವಿವಾಹದ ವಿಷಯದಲ್ಲಿ ಪೊಲೀಸರು ಯಾವುದೇ ದೂರಿಗಾಗಿ ಕಾಯಬೇಕಿಲ್ಲ. ಮಾಹಿತಿ ಸಿಕ್ಕ ಕೂಡಲೇ ಸ್ವಯಂಪ್ರೇರಿತ ದೂರು ದಾಖಲಿಸಿ ತಕ್ಷಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

ಪೊಲೀಸ್‌ ಉಪಾಧೀಕ್ಷಕ ಅರುಣ್‌ ನಾಗೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗಂಗಪ್ಪ, ಜಿಲ್ಲಾ ನಿರೂಪಣಾಧಿಕಾರಿ ಡಿ. ಮಂಜುನಾಥ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ. ಪ್ರೇಮಮೂರ್ತಿ, ಪ್ರಾದೇಶಿಕ ಸಂಯೋಜಕ ಕೆ. ರಾಘವೇಂದ್ರ ಭಟ್‌ ಇದ್ದರು.

ಮಕ್ಕಳ ನ್ಯಾಯ ಕಾಯ್ದೆ-2015 ಪರಿಣಾಮಕಾರಿಯಾಗಿ ಜಾರಿಗೆ ಬರಲು ಅಧಿಕಾರಿಗಳಲ್ಲಿ ಮಾನವೀಯತೆ ಇರಬೇಕು. ಕೇವಲ ಯಾಂತ್ರಿಕವಾಗಿ ಕರ್ತವ್ಯ ನಿರ್ವಹಿಸದೆ ಮಕ್ಕಳ ವಿಷಯದಲ್ಲಿ ಸಂವೇದನಾಶೀಲರಾಗಿ ವರ್ತಿಸುವುದು ಅತ್ಯಗತ್ಯ.
ಕೆ.ಟಿ.ತಿಪ್ಪೇಸ್ವಾಮಿ ಸದಸ್ಯ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.