ADVERTISEMENT

ಆಹಾರದ ಮೆನು ಬದಲಿಸಲು ಸೂಚನೆ

ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 8:59 IST
Last Updated 12 ಫೆಬ್ರುವರಿ 2020, 8:59 IST
ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಮಂಗಳವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.
ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಮಂಗಳವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.   

ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡುವ ಆಹಾರದ ಮೆನು ಬದಲಿಸಲು ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಸೂಚನೆ ನೀಡಿದರು. ಮಧುಮೇಹ, ರಕ್ತದೊತ್ತಡದಿಂದ ಬಳಲುವ ರೋಗಿಗಳು ಹಾಗೂ ಬಾಣಂತಿಯರಿಗೆ ನೀಡುವ ಊಟ ಹಾಗೂ ತಿಂಡಿಯ ಮೆನು ಬದಲಾಗಲಿದೆ.

ಜಿಲ್ಲಾ ಆಸ್ಪತ್ರೆಗೆ ಮಂಗಳವಾರ ದಿಢೀರ್‌ ಭೇಟಿ ನೀಡಿದ ಜಿಲ್ಲಾಧಿಕಾರಿ ಎಲ್ಲ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ರೋಗಿಗಳು, ಚಿಕಿತ್ಸೆ ಹಾಗೂ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದರು. ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ವೈದ್ಯರ ಸಭೆ ನಡೆಸಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು.

ಆಸ್ಪತ್ರೆಗೆ ದಾಖಲಾಗುವ ಒಳರೋಗಿಗಳಿಗೆ ಹಾಲು, ಬ್ರೆಡ್‌, ತಿಂಡಿ, ಅನ್ನ, ಸಾಂಬಾರು, ಟೀ ಸೇರಿ ಇತರ ಆಹಾರ ನೀಡಲಾಗುತ್ತದೆ. ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುವ ರೋಗಿಗಳಿಗೆ ಅನ್ನದ ಪದಾರ್ಥ ಕಡಿಮೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಅನ್ನದ ಬದಲಿಗೆ ಚಪಾತಿ ನೀಡುವುದು ಸೂಕ್ತವೆಂದು ಸಲಹೆ ನೀಡಿದರು. ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸುವಂತೆ ಹೇಳಿದರು.

ADVERTISEMENT

‘ಅಪೌಷ್ಟಿಕತೆಯಿಂದ ಬಳಲುವ 343 ಮಕ್ಕಳು ಜಿಲ್ಲೆಯಲ್ಲಿದ್ದಾರೆ. ಅಂಗನವಾಡಿ ದಾಖಲಾತಿಗಳ ಪ್ರಕಾರ ಈ ಅಂಶ ಬೆಳಕಿಗೆ ಬಂದಿದೆ. ಆರು ತಿಂಗಳಿಂದ ಆರು ವರ್ಷದ ಒಳಗಿನ ಮಕ್ಕಳಲ್ಲಿ ಕೆಲವು ಕ್ಲಿಷ್ಟಕರ ಪ್ರಕರಣಗಳಿವೆ. ವೈದ್ಯಕೀಯ ಸಲಹೆ ಪಡೆಯಲು ನಿರ್ಧರಿಸಲಾಗಿದೆ. ಆರ್ಥಿಕ ನೆರವು ನೀಡುವಂತೆ ಸರ್ಕಾರವನ್ನು ಕೋರಲಾಗುತ್ತಿದೆ. ನವಜಾತ ಶಿಶುಗಳ ಆರೈಕೆಯಲ್ಲಿ ಹೆಚ್ಚು ನಿಗಾ ಇಡುವ ಅಗತ್ಯವಿದೆ’ ಎಂದು ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ತಿಳಿಸಿದರು.

ಕ್ಲಿಷ್ಟಕರ ಪರಿಸ್ಥಿತಿಯನ್ನು ನಿಭಾಯಿಸಿ ರೋಗಿಗಳಿಗೆ ಚಿಕಿತ್ಸೆ ನೀಡಿದ ಹಾಗೂ ಹೆರಿಗೆ ಮಾಡಿಸಿದ ವೈದ್ಯರನ್ನು ಜಿಲ್ಲಾಧಿಕಾರಿ ಅಭಿನಂದಿಸಿದರು. ಎಲ್ಲ ರೋಗಿಗಳಿಗೂ ಸಕಾಲದಲ್ಲಿ ಚಿಕಿತ್ಸೆ ನೀಡುವ ತಜ್ಞ ವೈದ್ಯರು ಹಾಗೂ ಪರಿಕರಗಳು ಜಿಲ್ಲಾ ಆಸ್ಪತ್ರೆಯಲ್ಲಿ ಇವೆ ಎಂಬುದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ ಎಂದು ಹೇಳಿದರು.

ಜಿಲ್ಲಾಸರ್ಜನ್ ಡಾ.ಎಚ್.ಜೆ.ಬಸವರಾಜಪ್ಪ, ಸ್ಥಾನಿಕ ವೈದ್ಯಾಧಿಕಾರಿ ಡಾ.ಆನಂದಪ್ರಕಾಶ್, ವೈದ್ಯರಾದ ಡಾ.ಈ.ಸತೀಶ್, ಡಾ.ದೇವರಾಜ್, ಡಾ.ರೂಪಶ್ರೀ, ಡಾ.ಮೋಹನ್‍ಕುಮಾರ್, ಡಾ.ಮಲ್ಲಪ್ಪ ಹಾಗೂ ಆಡಳಿತಾಧಿಕಾರಿ ಮಲ್ಲಿಕಾರ್ಜುನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.