ADVERTISEMENT

ಚಿತ್ರದುರ್ಗ: ವಾರ್ಡ್‌, ಗ್ರಾ.ಪಂ ಮಟ್ಟದಲ್ಲಿ ಕಾರ್ಯಕ್ರಮ

ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 15:40 IST
Last Updated 1 ಜುಲೈ 2020, 15:40 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿ ಮೂವರು ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಗುರುವಾರ ಬೆಂಗಳೂರಿನಲ್ಲಿ ನಡೆಯಲಿದ್ದು, ಚಿತ್ರದುರ್ಗದ ವಾರ್ಡ್‌ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಾಧ್ಯಕ್ಷರಾದ ಸತೀಶ್‌ ಜಾರಕಿಹೊಳಿ, ಈಶ್ವರ್‌ ಖಂಡ್ರೆ ಹಾಗೂ ಸಲೀಂ ಅಹಮ್ಮದ್‌ ಅಧಿಕಾರ ಸ್ವೀಕರಿಸಲಿದ್ದಾರೆ. ಲಾಕ್‌ಡೌನ್‌ ನಿಯಮಾವಳಿ ಪ್ರಕಾರ ಸಮಾರಂಭ ಏರ್ಪಡಿಸಲಾಗಿದೆ. ಪ್ರಮುಖ ಆಹ್ವಾನಿತರ ಸಮ್ಮುಖದಲ್ಲಿ ಸಂವಿಧಾನದ ಪೀಠಿಕೆ ಓದಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಕೊರೊನಾ ಸೋಂಕಿನ ಆತಂಕದ ನಡುವೆ ಸಮಾರಂಭ ನಡೆಯಲಿದೆ. ಜನರನ್ನು ಒಂದೆಡೆ ಸೇರಿಸುವ ಬದಲು ತಂತ್ರಜ್ಞಾನದ ನೆರವಿನಿಂದ ಸಮಾರಂಭದ ನೇರ ಪ್ರಸಾರ ಮಾಡಲಾಗುತ್ತಿದೆ. ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ವಾರ್ಡ್‌ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮ ನಡೆಸಿ ಸಂದೇಶ ರವಾನಿಸಲಿದ್ದಾರೆ’ ಎಂದು ಹೇಳಿದರು.

ADVERTISEMENT

‘ಕೆಪಿಸಿಸಿ ಪುನರ್‌ ರಚನೆಯಾಗಿ ಎರಡು ತಿಂಗಳು ಕಳೆದಿದೆ. ಲಾಕ್‌ಡೌನ್‌ ಇರುವ ಕಾರಣಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ನಗರದ ಆಯ್ದ ಐದು ಭಾಗಗಳಲ್ಲಿ ಸಮಾರಂಭ ನಡೆಯಲಿದೆ. ಮಾಸ್ಕ್, ಸ್ಯಾನಿಟೈಸ್‌, ಅಂತರ ಸೇರಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ತಾಲ್ಲೂಕಿಗೆ ಮೂರು ಸಾವಿರ ಮಾಸ್ಕ್‌ ವಿತರಿಸಲಾಗಿದೆ. ಲಕ್ಷಾಂತರ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡರಾದ ಆರ್.ಕೆ.ನಾಯ್ಡು, ಡಿ.ಎನ್.ಮೈಲಾರಪ್ಪ, ಸಂಪತ್‍ಕುಮಾರ್, ಎಂ.ಡಿ. ಹಸನ್‍ತಾಹೀರ್, ಎನ್.ಡಿ.ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.