ಚಿತ್ರದುರ್ಗ: ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಇಂಗುಗುಂಡಿಗಳನ್ನು ನಿರ್ಮಿಸಬೇಕು. ಬಾವಿ ಹಾಗೂ ಕೊಳವೆಬಾವಿಗಳ ಮೂಲಕವೂ ನೀರು ಇಂಗುವಂತಹ ವ್ಯವಸ್ಥೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಯುವ ಕಾರ್ಯಕ್ರಮಗಳ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
‘ನೀರಿನ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಮಳೆ ನೀರು ಸಂಗ್ರಹಕ್ಕೆ ಒತ್ತು ನೀಡಬೇಕಿದೆ. ಬಿದ್ದ ಮಳೆ ನೀರು ಪೋಲಾಗದಂತೆ ಎಚ್ಚರವಹಿಸಬೇಕಿದೆ. ನಿತ್ಯದ ಬಳಕೆಗೆ ಮಳೆ ನೀರು ಸಂಗ್ರಹಿಸಿಟ್ಟುಕೊಳ್ಳುವುದು ಉತ್ತಮ ಮಾರ್ಗ. ಇದರಿಂದ ಅಂತರ್ಜಲಮಟ್ಟವೂ ಪುನಶ್ಚೇತನಗೊಳ್ಳುತ್ತದೆ’ ಎಂದು ಹೇಳಿದರು.
ನೆಹರೂ ಯುವಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ಎನ್.ಸುಹಾಸ್, ‘ಜಲಸಂರಕ್ಷಣೆ, ನೀರಿನ ಮಿತ ಬಳಕೆ, ಮಳೆ ನೀರು ಸಂಗ್ರಹದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಹಸರೀಕರಣದ ಬಗ್ಗೆಯೂ ಅರಿವು ಮೂಡಿಸಲಾಗುತ್ತಿದೆ. ಚೆಕ್ಡ್ಯಾಂ ನಿರ್ಮಾಣ, ಕೆರೆಕಟ್ಟೆ ಒತ್ತುವರಿ ತೆರವುಗೊಳಿಸುವ ಬಗ್ಗೆ ಜನರ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಹೇಳಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ, ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಮಜರುಲ್ಲಾ, ವೈದ್ಯ ಡಾ.ಆನಂದ ಪ್ರಕಾಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.