ADVERTISEMENT

ಚಿತ್ರದುರ್ಗ ಸಂಪರ್ಕಿಸುವ ಎಲ್ಲ ಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 10:14 IST
Last Updated 30 ಮಾರ್ಚ್ 2020, 10:14 IST
   

ಚಿತ್ರದುರ್ಗ: ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲ ಗಡಿಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

‘ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಲಾಕ್‌ಡೌನ್‌ ಪರಿಣಾಮವಾಗಿ ನಿರಾಶ್ರಿತರಾಗಿರುವವರಿಗೆ ಜಿಲ್ಲೆಯಲ್ಲೇ ಆಶ್ರಯ ಕಲ್ಪಿಸಲಾಗುತ್ತದೆ. ಅವರಿಗೆ ಮೂಲ ಸೌಲಭ್ಯ ಒದಗಿಸಲು ಜಿಲ್ಲಾಡಳಿತ ಸಿದ್ಧವಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯನ್ನು ಸಂಪರ್ಕಿಸುವ ಆಂಧ್ರಪ್ರದೇಶದ ಗಡಿಯಲ್ಲಿ ಈವರೆಗೆ ಚೆಕ್‌ಪೋಸ್ಟ್‌ ಕಾರ್ಯನಿರ್ವಹಿಸುತ್ತಿತ್ತು. ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಗಡಿಯನ್ನು ಸಂಪರ್ಣವಾಗಿ ಮುಚ್ಚಲಾಗಿದೆ. ದಾವಣಗೆರೆ, ತುಮಕೂರು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಸಂಪರ್ಕ ಸಂಪೂರ್ಣ ಕಡಿತಗೊಳ್ಳಲಿದೆ.

ADVERTISEMENT

‘ಸಾಂಕ್ರಾಮಿಕ ರೋಗಗಳ ಕಾಯ್ದೆ-1987’, ‘ಕರ್ನಾಟಕ ಕೋವಿಡ್-19 ರೆಗ್ಯೂಲೇಷನ್ ಕಾಯ್ದೆ– 2020’ ಹಾಗೂ ‘ವಿಪತ್ತು ನಿರ್ವಹಣಾ ಕಾಯ್ದೆ-2005’ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ದಿನ ನಿತ್ಯದ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ವಿನಾಯಿತಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.