
ಚಿತ್ರದುರ್ಗ: ‘ಫೆ. 1ರಂದು ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ನಡೆಯಲಿರುವ ಉದ್ಯೋಗ ಮೇಳಕ್ಕೆ ಈಗಾಗಲೇ 1,800 ಅಭ್ಯರ್ಥಿಗಳು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಉದ್ಯೋಗ ಮೇಳದಲ್ಲಿ 7,500 ಅಭ್ಯರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಗುರುವಾರ ಉದ್ಯೋಗ ಮೇಳ ಕುರಿತು ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಪ್ರತಿ ಅಭ್ಯರ್ಥಿ ಕನಿಷ್ಠ 5ರಿಂದ 6 ಸ್ವವಿವರ (ರೆಸ್ಯೂಮ್) ಪ್ರತಿ ಹಾಗೂ ಪೂರಕ ದಾಖಲೆಗಳೊಂದಿಗೆ ಹಾಜರಾಗಬೇಕು. ಈಗಾಗಲೇ ಜಿಲ್ಲೆಯ ಉದ್ಯೋಗ ವಿನಿಮಯ ಕೇಂದ್ರದಲ್ಲಿ ತಾಂತ್ರಿಕ ಶಿಕ್ಷಣ ಪೂರೈಸಿದ 967ಕ್ಕೂ ಅಧಿಕ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕಳೆದ ಎರಡು ವರ್ಷದಲ್ಲಿ ಡಿಪ್ಲೊಮಾ ಹಾಗೂ ಐಟಿಐ ಪೂರೈಸಿದ 1,500 ವಿದ್ಯಾರ್ಥಿಗಳು ಇದ್ದಾರೆ’ ಎಂದು ತಿಳಿಸಿದರು.
‘ಇದರೊಂದಿಗೆ ಯುವನಿಧಿ ಯೋಜನೆಯಡಿ 5,034 ಫಲಾನುಭವಿಗಳು ನಿರುದ್ಯೋಗ ಭತ್ಯೆ ಪಡೆಯುತ್ತಿದ್ದಾರೆ. ಇವರೆಲ್ಲರೂ ಕಡ್ಡಾಯವಾಗಿ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಉದ್ಯೋಗ ಪಡೆದುಕೊಳ್ಳಬೇಕು. ಇದಕ್ಕಾಗಿ ಎಲ್ಲ ಅಧಿಕಾರಿಗಳು ಸಂಘಟಿತವಾಗಿ ಪ್ರಯತ್ನಿಸಿ ಪ್ರತಿ ಅಭ್ಯರ್ಥಿಗೂ ವೈಯಕ್ತಿಕವಾಗಿ ಕರೆ ಮಾಡಿ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಬೇಕು’ ಎಂದು ಹೇಳಿದರು.
‘ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಗಡಿ ಭಾಗದ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಮಾಡಲು ಕ್ರಮ ವಹಿಸಲಾಗಿದೆ. ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯ ವತಿಯಿಂದ ಚಿತ್ರದುರ್ಗ ಮಾತ್ರವಲ್ಲದೆ ತುಮಕೂರು, ಶಿವಮೊಗ್ಗ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆ ಸೇರಿ ವಿವಿಧ ಜಿಲ್ಲೆಗಳ ಪ್ರಮುಖ ಕಂಪನಿಗಳನ್ನು ಆಹ್ವಾನಿಸಲಾಗಿದೆ’ ಎಂದರು.
‘ಮೇಳದಲ್ಲಿ ಅಭ್ಯರ್ಥಿಗಳ ವಿದ್ಯಾರ್ಹತೆ ಆಧರಿಸಿ ಕಂಪನಿಗಳನ್ನು ಶಿಫಾರಸು ಮಾಡಲು 8–10 ಕೌಂಟರ್ ತೆರೆಯಲಾಗುವುದು. ಅಂದಾಜು 25 ಕೊಠಡಿಗಳಲ್ಲಿ ಉದ್ಯೋಗದಾತ ಕಂಪನಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗುವುದು’ ಎಂದು ತಿಳಿಸಿದರು.
‘ಉದ್ಯೋಗ ಮೇಳದಲ್ಲಿ ಹೆಚ್ಚಿನ ಅಭ್ಯರ್ಥಿಗಳು ಪಾಲ್ಗೊಳ್ಳುವಂತೆ ಮಾಡಲು ಸರಳವಾದ ಆನ್ಲೈನ್ ನೋಂದಣಿ ಪ್ರಕ್ರಿಯೆ ಮಾಡಲಾಗಿದೆ. ಗೂಗಲ್ ಫಾರ್ಮ್ನಲ್ಲಿ ನೋಂದಣಿಗೆ ಕ್ಯುಆರ್ ಕೋಡ್ ರೂಪಿಸಿ, ವಿವಿಧ ಮಾಧ್ಯಮಗಳ ಮೂಲಕ ಪ್ರಚಾರ ಮಾಡಲಾಗುತ್ತಿದೆ. ಮೇಳದ ಕುರಿತು ಜಿಲ್ಲೆಯ ಎಲ್ಲ 189 ಗ್ರಾಮ ಪಂಚಾಯಿತಿಗಳೂ ಸೇರಿ ನಗರ, ಪಟ್ಟಣ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವಚ್ಛ ವಾಹಿನಿ ವಾಹನಗಳಲ್ಲಿ ಜಿಂಗಲ್ ಪ್ರಸಾರ ಮಾಡುವ ಮೂಲಕ ಪ್ರಚಾರ ಕೈಗೊಳ್ಳಬೇಕು’ ಎಂದರು.
‘ಐಟಿಐ, ಡಿಪ್ಲೊಮಾ, ಪದವಿ, ಎಂಜಿನಿಯರಿಂಗ್ ಸೇರಿ ತಾಂತ್ರಿಕ ಶಿಕ್ಷಣ ಕಾಲೇಜುಗಳ ಮುಖ್ಯಸ್ಥರ ಮೂಲಕ ವಿದ್ಯಾರ್ಥಿಗಳಿಗೆ ಸಂದೇಶ ತಲುಪಿಸುವ ಕಾರ್ಯ ಮಾಡಬೇಕು. ಉದ್ಯೋಗ ಮೇಳ ಸಂದರ್ಭದಲ್ಲಿ ಸರ್ಕಾರಿ ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್ ಕಾಲೇಜು ಸಿಬ್ಬಂದಿಯನ್ನು ಸಂದರ್ಶನ ಕೊಠಡಿಗಳಿಗೆ ಮೇಲ್ವಿಚಾರಣೆಗಾಗಿ ನಿಯೋಜಿಸಬೇಕು’ ಎಂದರು.
‘ಹೆಚ್ಚು ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ಕೌಶಲಾಭಿವೃದ್ಧಿ ಇಲಾಖೆ, ಉದ್ಯೋಗ ವಿನಿಮಯ ಕಚೇರಿ ಅಧಿಕಾರಿಗಳು ಸಮನ್ವಯದೊಂದಿಗೆ ನೋಂದಣಿ ಮಾಡಿಸುವ ಕಾರ್ಯ ಮಾಡಬೇಕು. ಉದ್ಯೋಗ ಮೇಳ ನಡೆಯುವ ಸ್ಥಳದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಗೊಂದಲವಾಗದ ರೀತಿಯಲ್ಲಿ ಅಚ್ಚುಕಟ್ಟಾಗಿ ಮಾಹಿತಿ ನೀಡುವ ಕಾರ್ಯ ಆಗಬೇಕು’ ಎಂದರು.
ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಯೋಜನಾ ನಿರ್ದೇಶಕಿ ಜಯಲಕ್ಷ್ಮಿ, ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆ ಉಪನಿರ್ದೇಶಕ ಮಂಜುನಾಥ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ರಾಘವೇಂದ್ರ, ಉದ್ಯೋಗಾಧಿಕಾರಿ ರವೀಂದ್ರ, ಜಿಟಿಟಿಸಿ ಪ್ರಾಂಶುಪಾಲ ಸುಹಾಸ್, ಕಾರ್ಮಿಕ ಅಧಿಕಾರಿ ಅನಿಲ್ ಬಗಟೆ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಸಣ್ಣಕ್ಕಿ ಮಾರುತಿ ಇದ್ದರು.
ಯುವನಿಧಿ ಪಡೆಯುತ್ತಿರುವ ಅಭ್ಯರ್ಥಿಗಳೂ ಭಾಗಿ ಉದ್ಯೋಗದಾತ ಕಂಪನಿಗಳಿಗೆ ಅಧಿಕಾರಿಗಳ ಸ್ವಾಗತ ಗೂಗಲ್ ಫಾರ್ಮ್ ಮೂಲಕ ನೋಂದಣಿಗೆ ಅವಕಾಶ
ಬಿಇ ಪದವೀಧರರಿಗೂ ಅವಕಾಶ ‘ಐಟಿ ಬಿಟಿ ಮೆಕ್ಯಾನಿಕಲ್ ಆಟೊ ಮೊಬೈಲ್ ಸೇರಿದಂತೆ ವಿವಿಧ ಕ್ಷೇತ್ರಗಳ 100ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ’ ಎಂದು ಆಕಾಶ್ ತಿಳಿಸಿದರು. ‘ಬಿ.ಇ ಪದವೀಧರರಿಗಾಗಿ ಪ್ರತಿಷ್ಠಿತ ಐಟಿ ಕಂಪನಿಗಳು ಸಹ ಈ ಬಾರಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಎಸ್ಎಸ್ಎಲ್ಸಿ ಪಿಯುಸಿ ಐಟಿಐ ಡಿಪ್ಲೊಮಾ ಬಿ.ಇ ಹಾಗೂ ಇತರೆ ಯಾವುದೇ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.