ADVERTISEMENT

ಮನೋರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ, ಆರೈಕೆ ಬೇಕು: ನ್ಯಾಯಾಧೀಶ ರೋಣ ವಾಸುದೇವ್‌

ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ಉದ್ಘಾಟನೆ; ನ್ಯಾಯಾಧೀಶ ರೋಣ ವಾಸುದೇವ್‌ ಅಭಿಮತ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 6:02 IST
Last Updated 16 ಅಕ್ಟೋಬರ್ 2025, 6:02 IST
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ  ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ಉದ್ಘಾಟನೆ ನಂತರ ನ್ಯಾಯಾಧೀಶರಾದ ರೋಣ ವಾಸುದೇವ್‌,  ವೀರಣ್ಣ ಸೋಮಶೇಖರ್, ಎಂ.ವಿಜಯ್‌ ಚರ್ಚೆ ನಡೆಸಿದರು
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ  ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ಉದ್ಘಾಟನೆ ನಂತರ ನ್ಯಾಯಾಧೀಶರಾದ ರೋಣ ವಾಸುದೇವ್‌,  ವೀರಣ್ಣ ಸೋಮಶೇಖರ್, ಎಂ.ವಿಜಯ್‌ ಚರ್ಚೆ ನಡೆಸಿದರು   

ಚಿತ್ರದುರ್ಗ: ‘ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡು ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಹಾಗೂ ಆರೈಕೆಯ ಅವಶ್ಯಕತೆ ಇರುತ್ತದೆ. ಸಮಸ್ಯೆಗಳನ್ನು ಗುರುತಿಸಿ ಶೀಘ್ರ ಚಿಕಿತ್ಸೆ ನೀಡಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸಿವಿಲ್‌ ನ್ಯಾಯಾಧೀಶ ರೋಣ ವಾಸುದೇವ್ ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಆಸ್ಪತ್ರೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬುಧವಾರ ನಡೆದ ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ಉದ್ಘಾಟನೆ ಸಮಾರಂಭದಲ್ಲಿ, ಮಾನಸಿಕ ಆರೋಗ್ಯ ದೂರುಗಳನ್ನು ಸ್ವೀಕರಿಸುವ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.

‘ಜಿಲ್ಲಾ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಕಾರ್ಯಾರಂಭ ಮಾಡಿರುವುದು ಸಂತಸದ ವಿಚಾರ. ಜಿಲ್ಲೆಯಾದ್ಯಂತ ಮಾನಸಿಕ ರೋಗಿಗಳನ್ನು ಗುರುತಿಸುವ ಕೆಲಸವಾಗಬೇಕು. ಇದು ಘಟಕದ ಪ್ರಮುಖ ಉದ್ದೇಶವೂ ಆಗಿದೆ. ಚಿಕಿತ್ಸೆ ನೀಡಿದ ಮೇಲೆಯೂ ಗುಣಮುಖರಾಗದ ವ್ಯಕ್ತಿಗಳಿಗೆ ಮಾನಸಿಕ ಸ್ವಾಸ್ಥ್ಯ ಪ್ರಮಾಣ ಪತ್ರ ನೀಡಬೇಕು. ಪ್ರಮಾಣ ಪತ್ರ ಪಡೆದವರಿಗೆ ಸರ್ಕಾರದ ಯೋಜನೆಯ ಲಾಭ ಸಿಗಬೇಕು’ ಎಂದರು.

ADVERTISEMENT

‘ಸಾರ್ವಜನಿಕರು ಮಾನಸಿಕ ಆರೋಗ್ಯ ಕೇಂದ್ರದಲ್ಲಿ ದೂರುಗಳನ್ನು ಸಲ್ಲಿಸಬಹುದು. ಕುಂದು– ಕೊರತೆಗಳು ಹಾಗೂ ದೂರುಗಳು ಸಂಬಂಧಪಟ್ಟ ಅಧಿಕಾರಿಗಳು ಇವುಗಳು ನಿವಾರಿಸುವರು. ಜಿಲ್ಲಾ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವವರು ಯಾರಾದರೂ ಕಂಡು ಬಂದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಅವರ ಚಿಕಿತ್ಸೆಗೆ ಸಹಕರಿಸಬೇಕು’ ಎಂದರು.

1ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ನ್ಯಾಯಾಧೀಶ ವೀರಣ್ಣ ಸೋಮಶೇಖರ್ ಮಾತನಾಡಿ, ‘ಮಾನಸಿಕ ಅಸ್ವಸ್ಥತೆ ಹಾಗೂ ಮಾನಸಿಕ ಆರೋಗ್ಯ ಸಂರಕ್ಷಣಾ ಕಾಯ್ದೆಯಡಿ ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿಯನ್ನು ರಚನೆ ಮಾಡಲಾಗಿದೆ. ಇದಕ್ಕಾಗಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಇದ್ದು ಸಾರ್ವಜನಿಕರು ಮಾನಸಿಕ ಆರೋಗ್ಯ ಸೇವೆ ಪಡೆಯಬಹುದು. ಮನೋರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡಿದರೆ ಅವರನ್ನು ಮುಖ್ಯವಾಹಿನಿಗೆ ತರುವ ಸಾಧ್ಯತೆ ಇದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ‘ಮಾನಸಿಕ ಅಸ್ವಸ್ಥರನ್ನು ಮುಖ್ಯ ವಾಹಿನಿಗೆ ತರುವ ಕೆಲಸ ಮಾಡಬೇಕು. ಇವರು ಸಹ ಮನೋವೈದ್ಯಾಧಿಕಾರಿಗಳಿಂದ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯ ವೃದ್ಧಿಸಿಕೊಂಡು ಸಮಾಜದಲ್ಲಿ ಎಲ್ಲರೊಡನೆ ಬೆರೆಯಬಹುದು. ಸಮಾಜ ಕೂಡ ಮನೋರೋಗದಿಂದ ಬಳಲುವವರಿಗೆ ಸಹಾಯ ಮಾಡಬೇಕು. ಬೇರೆ ಬೇರೆ ಕಾರಣಗಳಿಂದ ಮನೋ ಸಮಸ್ಯೆಯಿಂದ ಬಳಲುವವರಿಗೆ ಸಹಕಾರ ನೀಡಬೇಕು’ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ ರವೀಂದ್ರ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ನಾಗರಾಜ್, ಜಿಲ್ಲಾ ಆಸ್ಪತ್ರೆಯ ಮನೋವೈದ್ಯೆ ಡಾ.ಪಾರ್ವತಿ, ಹಾಯ್ಕಲ್‍ನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹರ್ಷ ಇದ್ದರು.

ಕಾಯ್ದೆಯ ಅನುಸಾರ ಘಟಕ ಕಾರ್ಯ ನಿರ್ವಹಣೆ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ರಚನೆ | ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.