ನಾಯಕನಹಟ್ಟಿ: ವೇಗವಾಗಿ ಬೆಳೆಯುತ್ತಿರುವ ಆಧುನಿಕ ಯುಗದಲ್ಲಿ ಗ್ರಾಮೀಣ ಭಾಗದ ಜನರ ಸರ್ವತೋಮುಖ ಅಭಿವೃದ್ಧಿಯು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು.
ನಾಯಕನಹಟ್ಟಿ ಹೋಬಳಿಯ ರಾಮದುರ್ಗ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. ಗ್ರಾಮಗಳ ಶಾಲೆಗಳಲ್ಲಿ ಮೂಲಸೌಕರ್ಯ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಅದರಲ್ಲೂ ಶಿಥಿಲಾವಸ್ಥೆ ತಲುಪಿರುವ ಶಾಲಾ ಕಟ್ಟಡಗಳನ್ನು, ಕೊಠಡಿಗಳನ್ನು ತೆರವೊಗೊಳಿಸಿ ಅದೇ ಜಾಗದಲ್ಲಿ ನೂತನ ಬೋಧನಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ₹ 25 ಲಕ್ಷ ವೆಚ್ಚದ ಸಿಸಿ ರಸ್ತೆ, ತಳಕು ಗ್ರಾಮದ ಎಸ್.ಜಿ.ಟಿ. ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ₹ 75.35 ಲಕ್ಷ ವೆಚ್ಚದ ಬೋಧನಾ ಕೊಠಡಿಗಳ ನಿರ್ಮಾಣ, ನಾಯಕನಹಟ್ಟಿ ಹೋಬಳಿಯ ರಾಮದುರ್ಗ ಗ್ರಾಮದಲ್ಲಿ ₹ 20.38 ಲಕ್ಷ ವೆಚ್ಚದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ನೆಲಗೇತನಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾಲಮ್ಮ ಪೂರ್ಣ ಓಬಯ್ಯ, ಉಪಾಧ್ಯಕ್ಷ ಈಗಲ ಬೋರಯ್ಯ, ಸದಸ್ಯರಾದ ಬಂಗಾರಪ್ಪ, ಬೋಸಯ್ಯ, ದ್ರಾಕ್ಷಾಯಣಿ ಚಿದಾನಂದ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಪಿ.ನಾಗೇಶ್ರೆಡ್ಡಿ, ಮುಖಂಡರಾದ ಜಿ.ಬಿ.ಮುದಿಯಪ್ಪ, ವೆಂಕಟೇಶ, ಅಜ್ಜಯ್ಯ, ಎಂ.ಬಿ.ಸಣ್ಣಬೋರಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.