
ನಾಯಕನಹಟ್ಟಿ: ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಬರೆದು ಹಿಂದಿರುಗುತ್ತಿದ್ದಾಗ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಗೂಡ್ಸ್ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಹೋಬಳಿಯ ರೇಖಲಗೆರೆ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ಅಜ್ಜಯ್ಯ, ಸೃಜನ್, ಶ್ರೀಕಾಂತ್, ಪ್ರಸಾದ್ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೋಬಳಿಯ ರೇಖಲಗೆರೆ ಲಂಬಾಣಿಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅಬ್ಬೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಪರೀಕ್ಷಾ ಕೇಂದ್ರವಾಗಿದೆ. ಮಂಗಳವಾರ ನಡೆದ ಗಣಿತ ವಿಷಯದ ಪೂರ್ವಸಿದ್ಧತಾ ಪರೀಕ್ಷೆ ಮುಗಿಸಿ ಗೂಡ್ಸ್ ವಾಹನದಲ್ಲಿ ಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಮಲ್ಲೂರಹಳ್ಳಿ ಸಮೀಪದ ಕಾವಲು ಪ್ರದೇಶದಲ್ಲಿ ವಾಹನದ ಮುಂದಿನ ಟೈರ್ ಸ್ಫೋ ಟಗೊಂಡು ವಾಹನದ ನಿಯಂತ್ರಣ ತಪ್ಪಿದೆ.
ತಕ್ಷಣವೇ ಗೂಡ್ಸ್ವಾಹನ ರಸ್ತೆಯಿಂದ ಪಕ್ಕಕ್ಕೆ ಜಾರಿ ಪಲ್ಟಿಯಾಗಿದೆ. ಇದರಿಂದ ಒಬ್ಬ ವಿದ್ಯಾರ್ಥಿಯ ಕಾಲು ಮತ್ತು ಕೈ ಮೂಳೆ ಮುರಿದಿದೆ. ತಕ್ಷಣವೇ ಗಾಯಗೊಂಡ ವಿದ್ಯಾರ್ಥಿಗಳನ್ನು ನಾಯಕನಹಟ್ಟಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಮುಖ್ಯಶಿಕ್ಷಕ ವೆಂಕಟೇಶ್, ಬಿಇಒ ಕೆ.ಎಸ್.ಸುರೇಶ್ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸುವಲ್ಲಿ ನಿರತರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.