ADVERTISEMENT

ಚಿತ್ರದುರ್ಗ | ಸಮೀಕ್ಷೆ; 3ನೇ ಆವೃತ್ತಿಯ ತಂತ್ರಾಂಶದಲ್ಲಿ ಚುರುಕು

ಪ್ರತಿದಿನ 20–30 ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ವೆಂಕಟೇಶ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2025, 6:12 IST
Last Updated 27 ಸೆಪ್ಟೆಂಬರ್ 2025, 6:12 IST
ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್‌.ಆಕಾಶ್‌ ಅವರು ಅಧಿಕಾರಿಗಳ ಸಭೆ ನಡೆಸಿದರು
ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್‌.ಆಕಾಶ್‌ ಅವರು ಅಧಿಕಾರಿಗಳ ಸಭೆ ನಡೆಸಿದರು   

ಚಿತ್ರದುರ್ಗ: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಅಭಿವೃದ್ಧಿಪಡಿಸಲಾಗಿರುವ 3ನೇ ಆವೃತ್ತಿಯ ತಂತ್ರಾಂಶ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಆ್ಯಪ್‌ ಚುರುಕು ಪಡೆದುಕೊಂಡಿದ್ದು ಸಮೀಕ್ಷಕರು ಸಮೀಕ್ಷೆಯನ್ನು ಬಿರುಸುಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

‘ವಿದ್ಯುತ್ ಸಂಪರ್ಕ ಸಂಖ್ಯೆ ಆಧರಿಸಿ ಸ್ಟಿಕ್ಕರ್ ಅಂಟಿಸುವ ಮೂಲಕ ಬೆಸ್ಕಾಂ ಸಿಬ್ಬಂದಿ ಮನೆಗಳನ್ನು ಗುರುತು ಮಾಡಬೇಕು. ಪ್ರತಿ ತಾಲ್ಲೂಕಿಗೂ ನೇಮಿಸಿರುವ ಉಸ್ತುವಾರಿ ಅಧಿಕಾರಿಗಳು ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ರೊಂದಿಗೆ ಸಮನ್ವಯ ಸಾಧಿಸಿ, ಮನೆಗಳ ವಿವರ, ಮಾಲೀಕರ ಮೊಬೈಲ್ ಸಂಪರ್ಕ ಸಂಖ್ಯೆಗಳನ್ನು ಪಡೆದುಕೊಂಡು ಗಣತಿದಾರರಿಗೆ ನೀಡಬೇಕು’ ಎಂದು ಸೂಚಿಸಿದರು.

‘ಸಮೀಕ್ಷಕರು ಸಮೀಕ್ಷೆಗೆ ತೆರಳುವ ಮುನ್ನಾದಿನವೇ ಕರೆ ಮಾಡಿ ಸಮೀಕ್ಷೆಗೆ ಬರುತ್ತಿರುವ ಮಾಹಿತಿ ನೀಡಬೇಕು. ತಾಂತ್ರಿಕ ಸಮಸ್ಯೆಗಳ ಕಾರಣಕ್ಕೆ ನಾಲ್ಕು ದಿನ ಸಮೀಕ್ಷೆ ಕಾರ್ಯಕ್ಕೆ ಹಿನ್ನಡೆಯಾಗಿದೆ. ಮುಂದೆ ಪ್ರತಿ ಸಿಬ್ಬಂದಿ ಪ್ರತಿ ದಿನ 10 ರಿಂದ 20 ಮನೆಗಳ ಸಮೀಕ್ಷೆ ನಡೆಸಿ ನಿಗದಿಪಡಿಸಿದ ದಿನದೊಳಗೆ ಪೂರ್ಣಗೊಳಿಸಬೇಕು’ ಎಂದರು.

‘ಸಮೀಕ್ಷಾ ಕಾರ್ಯಕ್ಕೆ ಮೊಬೈಲ್‌ ನೆಟ್‍ವರ್ಕ್ ಅವಶ್ಯಕತೆ ಇದೆ. ನೆಟ್‌ವರ್ಕ್‌ ಸಿಗದೆ ಇರುವ ಪ್ರದೇಶಗಳಲ್ಲಿ ಶಾಲೆ ಅಥವಾ ಗ್ರಾಮ ಪಂಚಾಯಿತಿಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಸಮೀಕ್ಷೆ ಕಾರ್ಯ ನಡೆಸಲು ಹಿಂದುಳಿದ ವರ್ಗಗಳ ಆಯೋಗ ಅನುಮತಿ ನೀಡಿದೆ. ಹೀಗಾಗಿ ಜಿಲ್ಲೆಯಲ್ಲಿ ನೆಟ್‍ವರ್ಕ್‌ ಸಿಗದ ಪ್ರದೇಶಗಳನ್ನು ಅಧಿಕಾರಿಗಳು ಗುರುತಿಸಬೇಕು. ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಸಮಾನಾಂತರವಾಗಿ ಸಮೀಕ್ಷೆ ಶಿಬಿರಗಳನ್ನು ಆಯೋಜಿಸಬೇಕು’ ಎಂದರು.

ಮುಖ್ಯಮಂತ್ರಿ ವಿಡಿಯೊ ಸಂವಾದ: ‘ಮುಖ್ಯಮಂತ್ರಿ ಜೊತೆ ನಡೆದ ವಿಡಿಯೊ ಸಂವಾದದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಒಗಳು ಸಮೀಕ್ಷೆ ಜವಾಬ್ದಾರಿ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಪ್ರತಿದಿನ ಸಮೀಕ್ಷೆ ಪ್ರಗತಿ ಕುರಿತು ಪರಿಶೀಲನಾ ವರದಿ ನೀಡಬೇಕಾಗಿದೆ. ಶಿಕ್ಷಕರು ಸಮೀಕ್ಷಾ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದೆ ಎಂದು ಸಿ.ಎಂ ತಿಳಿಸಿದ್ದಾರೆ’ ಎಂದು ಹೇಳಿದರು.

‘ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಮನ್ವಯದಿಂದ ಸಮೀಕ್ಷೆ ಕಾರ್ಯ ನಡೆಸಬೇಕು. ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ’ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿ.ಪಂ. ಸಿಇಒ ಡಾ.ಎಸ್‌.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಇದ್ದರು.

ನೆಟ್‌ವರ್ಕ್‌ ಸಮಸ್ಯೆಯಾದರೆ ಶಿಬಿರ ಆಯೋಜನೆ ಸಮೀಕ್ಷೆಗೂ ಮೊದಲೇ ಮಾಹಿತಿ ನೀಡಲು ಸೂಚನೆ ಬೆಸ್ಕಾಂ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.