
ಚಿತ್ರದುರ್ಗ: ಮದ್ಯ ಸೇವನೆಗೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ತಾಯಿಯನ್ನೇ ಕೊಲೆ ಮಾಡಿದ್ದ ಮಗನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮೊಳಕಾಲ್ಮೂರು ತಾಲ್ಲೂಕಿನ ಕೊಪ್ಪ ಗ್ರಾಮದ ನಿವಾಸಿ ಸಿ. ಶಿವಾರೆಡ್ಡಿ ಶಿಕ್ಷೆಗೆ ಗುರಿಯಾದ ಆರೋಪಿ. ಈತ ತನ್ನ ತಾಯಿ ಅಂಜಿನಮ್ಮ ಹತ್ಯೆ ಮಾಡಿದ್ದನು. ಶಿವಾರೆಡ್ಡಿ ತೀವ್ರ ಮದ್ಯಪಾನದ ಚಟಕ್ಕೆ ಒಳಗಾಗಿದ್ದು, ಇದೇ ವಿಚಾರಕ್ಕೆ ತಾಯಿಯ ಜತೆ ಜಗಳವಾಡುತ್ತಿದ್ದನು. 2023ರ ನವೆಂಬರ್ 25ರ ಸಂಜೆ 6.45ರ ಸುಮಾರಿಗೆ ಮದ್ಯ ಸೇವನೆಗೆ ಹಣ ನೀಡುವಂತೆ ತಾಯಿಯನ್ನು ಪೀಡಿಸಿದಾಗ ನಿರಾಕರಿಸಿದ ಕಾರಣಕ್ಕೆ ಕೊಲೆ ಮಾಡಿದ್ದನು.
ರಾಂಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಸಂತ ವಿಠಲ್ ಅಸೋದೆ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ ಅವರು, ಆರೋಪಿಯ ಮೇಲಿನ ಕೊಲೆ ಅಪರಾಧ ಸಾಬೀತಾದ ಕಾರಣ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಂಶೀರ್ ಅಲಿಖಾನ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.