
ಚಿತ್ರದುರ್ಗ: ಕುಂಚಿಗನಾಳ್ ಕಣಿವೆ ಬಳಿ ನಿರ್ಮಾಣಗೊಂಡಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಸಿಎಂಸಿಆರ್ಐ)ಗೆ ಹಸ್ತಾಂತರಗೊಳಿಸುವ ಪ್ರಕ್ರಿಯೆ ಮತ್ತಷ್ಟು ಸನ್ನಿಹಿತವಾಗಿದೆ. ಇದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ ಸಮ್ಮತಿ ಸೂಚಿಸಿದ್ದು ಶೀಘ್ರ ಹಸ್ತಾಂತರ ಪ್ರಕ್ರಿಯೆ ಆರಂಭಗೊಳ್ಳುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಗುರುವಾರ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, ಡಾ. ಎಂ.ಸಿ. ಸುಧಾಕರ್, ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಸೇರಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಕಟ್ಟಡವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ವಿವಿಧ ವಿಭಾಗಗಳಿಗಾಗಿ ಬಳಸಬಹುದು. ವೈದ್ಯಕೀಯ ಶಿಕ್ಷಣ ಇಲಾಖೆಯ ಪರಿಣಿತ ಅಧಿಕಾರಿಗಳ ಸಮಿತಿಯು ಶೀಘ್ರವೇ ಚಿತ್ರದುರ್ಗಕ್ಕೆ ತೆರಳಿ ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ ಸೂಚಿಸಿದರು.
ಸಿಎಂಸಿಆರ್ಐ ನಿರ್ದೇಶಕ ಡಾ.ಬಿ.ವೈ.ಯುವರಾಜ್ ಮಾತನಾಡಿ ‘ ಜಿ.ಆರ್.ಹಳ್ಳಿಯ ದಾವಣಗೆರೆ ವಿವಿ ಸ್ನಾತಕೋತ್ತರ ಕೇಂದ್ರ ಜ್ಞಾನಗಂಗೋತ್ರಿ ಆವರಣದಲ್ಲಿ 8 ಕೊಠಡಿ ಪಡೆದು ವೈದ್ಯಕೀಯ ಕಾಲೇಜು ನಡೆಸಲಾಗುತ್ತಿದೆ. ಇನ್ನೂ ಹೆಚ್ಚಿನ 9 ಕೊಠಡಿ ಒದಗಿಸಲು ಕ್ರಮ ವಹಿಸಬೇಕು’ ಎಂದು ಬೇಡಿಕೆ ಇಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.