ಚಿತ್ರದುರ್ಗ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯದ ಆಹಾರ ಗುಣಮಟ್ಟದ ಪರಿಶೀಲನೆಗೆ ಸಮಿತಿ ರಚಿಸಬೇಕು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿರೀಕ್ಷಿತವಾಗಿ ಭೇಟಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಪಂಚಾಯಿತಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿನಿಲಯದಲ್ಲಿ ಕಳಪೆ ಆಹಾರ ಪೂರೈಕೆ, ಕಟ್ಟಡ ಸುಸ್ಥಿತಿಯಲ್ಲಿಲ್ಲ ಎಂಬ ದೂರುಗಳು ಬರುತ್ತಿವೆ. ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಯ ಎಚ್ಚರಿಕೆ ನೀಡಿವೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಏನು ಕೆಲಸ ಮಾಡುತ್ತಿದ್ದೀರಿ? ಆಹಾರ ಪೂರೈಕೆ ಮಾಡುವ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿ. ಕಳಪೆ ಆಹಾರ ಪೂರೈಕೆಯಾದರೆ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ. ಆಹಾರ ಗುಣಮಟ್ಟ ಪರಿಶೀಲನೆಗೆ ಸಮಿತಿ ರಚಿಸಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮೇಲ್ವಿಚಾರಣೆ ನಡೆಸಬೇಕು’ ಎಂದು ತಾಕೀತು ಮಾಡಿದರು.
ಇದಕ್ಕೆ ಧ್ವನಿಗೂಡಿಸಿದ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ‘ವಿದ್ಯಾರ್ಥಿನಿಲಯಗಳ ಆಹಾರ ಗುಣಮಟ್ಟ ಪರಿಶೀಲನೆ ವ್ಯವಸ್ಥೆಯನ್ನುದಾವಣಗೆರೆಯಲ್ಲಿ ಮಾಡಲಾಗಿದೆ. ಅಧಿಕಾರಿಗಳು ನಿತ್ಯ ಒಂದೊಂದು ಹಾಸ್ಟೆಲ್ಗೆ ಭೇಟಿ ನೀಡಿ ಆಹಾರ ಸೇವಿಸಿ ಪರೀಕ್ಷಿಸಬೇಕು. ವಿದ್ಯಾರ್ಥಿಗಳ ಸಮಸ್ಯೆ ಆಲಿಸಬೇಕು’ ಎಂದು ಹೇಳಿದರು.
₹ 90 ಕೋಟಿ ಪರಿಹಾರ ಬಾಕಿ: ಮುಂಗಾರು ಹಂಗಾಮಿನಲ್ಲಿ ಸುರಿದ ಮಳೆಗೆ ನಷ್ಟವಾಗಿರುವ ಬೆಳೆಗೆ ಇನ್ನೂ 83 ಸಾವಿರ ರೈತರಿಗೆ ₹ 90 ಕೋಟಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಜಂಟಿಕೃಷಿ ನಿರ್ದೇಶಕ ರಮೇಶ್ಕುಮಾರ್ ಸಭೆಗೆ ಮಾಹಿತಿ ನೀಡಿದರು.
‘ಜಿಲ್ಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೆ 71,158 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ₹ 99.28 ಕೋಟಿ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ’ ಎಂದು ಹೇಳಿದರು.
‘ಮುಂಗಾರು ಅವಧಿಯಲ್ಲಿ ಸುರಿದ ಹೆಚ್ಚು ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ. ಈ ಪೈಕಿ 14,980 ಹೆಕ್ಟೇರ್ ಈರುಳ್ಳಿ ನಾಶವಾಗಿದೆ’ ಎಂದು ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಸಭೆಗೆ ಮಾಹಿತಿ ನೀಡಿದರು.
ಗೊಬ್ಬರ, ಕೀಟನಾಶಕ ನಕಲಿ ಜಾಲ: ನಕಲಿ ರಸಗೊಬ್ಬರವನ್ನು ರೈತರಿಗೆ ಪೂರೈಕೆ ಮಾಡಿದ ಪ್ರಕರಣ ತನಿಖೆಯ ಹಂತದಲ್ಲಿ ಇರುವಾಗಲೇ ಜೈವಿಕ ಗೊಬ್ಬರ ಹಾಗೂ ಕೀಟನಾಶಕವನ್ನೂ ನಕಲಿ ಮಾಡಿ ಮಾರಾಟ ಮಾಡುತ್ತಿರುವ 14 ಪ್ರಕರಣಗಳು ಬೆಳಕಿಗೆ ಬಂದಿವೆ.
‘ಜಿಲ್ಲೆಯಲ್ಲಿ ಅನುಮಾನ ವ್ಯಕ್ತವಾದ 36 ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಗೊಬ್ಬರದ 9 ಹಾಗೂ ಕೀಟನಾಶಕದ 5 ಮಾದರಿ ನಕಲಿ ಎಂಬುದು ಪತ್ತೆಯಾಗಿವೆ’ ಎಂದು ಜಂಟಿಕೃಷಿ ನಿರ್ದೇಶಕ ರಮೇಶ್ಕುಮಾರ್ ಮಾಹಿತಿ ನೀಡಿದರು.
‘ಜಿಲ್ಲೆಯಲ್ಲಿ ನಕಲಿ ಜೈವಿಕ ಗೊಬ್ಬರ ಹಾಗೂ ಕೀಟನಾಶಕಗಳು ರೈತರಿಗೆ ಮಾರಾಟ ಆಗುತ್ತಿವೆ. ಬೂದಿ ಮಿಶ್ರಣ ಮಾಡಿ ಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿವೆ. ನಕಲಿ ಗೊಬ್ಬರ ಹಾಗೂ ಕೀಟನಾಶಕ ಮಾರಾಟಗಾರರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನಕಲಿ ರಸಗೊಬ್ಬರ ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿ ಕೈಗೆತ್ತಿಕೊಂಡಿದ್ದು, ತನಿಖೆ ಯಾವ ಹಂತದಲ್ಲಿಯೇ ಎಂಬ ಮಾಹಿತಿಗಾಗಿ ಸಿಐಡಿಗೆ ಪತ್ರ ಬರೆಯಿರಿ’ ಎಂದು ಬಿ.ಸಿ.ಪಾಟೀಲ ಸೂಚನೆ ನೀಡಿದರು.
ಸಭೆಯಲ್ಲಿ ಎಂ.ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಇದ್ದರು.
*
ನಕಲಿ ಜೈವಿಕ ಗೊಬ್ಬರ ಹಾಗೂ ಕೀಟನಾಶಕವನ್ನು ರೈತರಿಗೆ ಪೂರೈಕೆ ಮಾಡುವುದು ತಪ್ಪು. ಇಂತಹ ಜಾಲದ ಪತ್ತೆಗೆ ವಿಶೇಷ ತಂಡ ರಚನೆ ಮಾಡಬೇಕು.
-ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾಧಿಕಾರಿ
*
ಅಕ್ರಮ ಮದ್ಯ ಮಾರಾಟ ವ್ಯಾಪಕವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು. ಆಗದಿದ್ದರೆ ಹಳ್ಳಿಯ ಪ್ರತಿ ಬೀದಿ, ಮನೆಗೆ ಎಂಎಸ್ಐಎಲ್ ಮಳಿಗೆ ತೆರೆಯಲು ಅವಕಾಶ ಕಲ್ಪಿಸಿ.
-ಗೂಳಿಹಟ್ಟಿ ಡಿ.ಶೇಖರ್, ಶಾಸಕ, ಹೊಸದುರ್ಗ
*
ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಗ್ರಾಮದಲ್ಲಿರುವ ವಿದ್ಯಾರ್ಥಿನಿಲಯ ಸ್ಥಳಾಂತರ ಮಾಡಬೇಕಿದೆ. ಚಿಕ್ಕಗೊಂಡನಹಳ್ಳಿ, ಪರಶುರಾಂಪುರ ಹಾಗೂ ಚಿತ್ರದುರ್ಗ ಪರಿಶೀಲಿಸಿ ಸ್ಥಳಾಂತರ ಮಾಡಿರಬಹುದು.
-ಟಿ.ರಘುಮೂರ್ತಿ, ಶಾಸಕ, ಚಳ್ಳಕೆರೆ
*
ಬಾಬೂ ಜಗಜೀವನರಾಮ್ ಭವನ ನಿರ್ಮಾಣಕ್ಕೆ ಅವಧಿ ಮುಗಿದರೂ ಇನ್ನೂ ಪೂರ್ಣಗೊಂಡಿಲ್ಲ. ಕಟ್ಟಡ ಸಂಪೂರ್ಣ ಪಾಳು ಬಿದ್ದಿದೆ. ಬಾಬೂಜಿ ಅವರಿಗೆ ಅವಮಾನ ಮಾಡಲಾಗುತ್ತಿದೆ. ಇಂತಹ ನಿರ್ಲಕ್ಷ್ಯ ಸಹಿಸಲು ಸಾಧ್ಯವಿಲ್ಲ.
-ಜಿ.ಎಚ್. ತಿಪ್ಪಾರೆಡ್ಡಿ, ಶಾಸಕ, ಚಿತ್ರದುರ್ಗ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.