ಚಿತ್ರದುರ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಕಾರಣರಾದ ಆರೋಪ ಎದುರಿಸುತ್ತಿರುವ ಶಾಸಕ ಕೆ.ಎಸ್.ಈಶ್ವರಪ್ಪ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಏ.18ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್ಪೀರ್ ತಿಳಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಗುತ್ತಿಗೆದಾರರು ಪ್ರಧಾನಿಗೆ ದೂರು ನೀಡಿದ್ದರು. ‘ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ’ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಪಕ್ಷದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಲ್ಲಿ ವಿಫಲರಾಗಿದ್ದಾರೆ. ಭ್ರಷ್ಟ ಸಚಿವರಿಂದ ಸಣ್ಣ ಗುತ್ತಿಗೆದಾರರು ಬದುಕುವುದು ಕಷ್ಟವಾಗಿದೆ’ ಎಂದು ಆರೋಪಿಸಿದರು.
‘ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ಮಿತಿಮೀರಿದೆ. ಜನಸಾಮಾನ್ಯರು ಬದುಕುವುದು ಕಷ್ಟವಾಗಿದೆ. ಶಾಸಕರು, ಸಚಿವರೇ ತಮ್ಮ ಮಕ್ಕಳು, ಸಂಬಂಧಿಕರ ಹೆಸರಿನಲ್ಲಿ ಗುತ್ತಿಗೆ ಪಡೆದು ಕಾಮಗಾರಿ ನಡೆಸುತ್ತಿದ್ದಾರೆ. ಇದರ ವಿರುದ್ಧ ಕಾಂಗ್ರೆಸ್ ಹೋರಾಟ ರೂಪಿಸಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ನೇತೃತ್ವ ವಹಿಸಲಿದ್ದಾರೆ’ ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಹಾಲೇಶ್ ಮಾತನಾಡಿ, ‘ಪ್ರತಿ ಚುನಾವಣೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಘೋಷಣೆ ಕೂಗುವ ಬಿಜೆಪಿ ಅನೈತಿಕ ಮಾರ್ಗದಲ್ಲಿ ಸರ್ಕಾರ ರಚಿಸುತ್ತದೆ. ಬಡವರು, ರೈತರು ಸೇರಿ ದೇಶದ ಯಾವ ಪ್ರಜೆಗಳ ಮೇಲೂ ಇವರಿಗೆ ಕಾಳಜಿ ಇಲ್ಲ. ಯಾವ ರಾಜ್ಯದಲ್ಲಿಯೂ ಜನಪರ ಆಡಳಿತ ನೀಡುತ್ತಿಲ್ಲ’ ಎಂದು ದೂರಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಮುಖಂಡರಾದ ಸಂಪತ್ಕುಮಾರ್, ಮೈಲಾರಪ್ಪ, ಲಕ್ಷ್ಮೀಕಾಂತ್, ರಘು ಇದ್ದರು.
***
ಕಾಂಗ್ರೆಸ್ಗೆ ಜಿಲ್ಲೆಯಲ್ಲಿ 3.16 ಲಕ್ಷ ಸದಸ್ಯರು ನೋಂದಣಿ ಆಗಿದ್ದಾರೆ. ಹಿರಿಯೂರು ಕ್ಷೇತ್ರವೊಂದರಲ್ಲೇ 90 ಸಾವಿರ ನೋಂದಣಿಯಾಗಿದೆ. ಭಾರಿ ಸಂಖ್ಯೆಯ ಸದಸ್ಯರು ನೋಂದಣಿಯಾದ ರಾಜ್ಯದ ಮೊದಲ ಕ್ಷೇತ್ರ ಹಿರಿಯೂರು.
ಎಂ.ಕೆ.ತಾಜ್ಪೀರ್,ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.