ನನ್ನಿವಾಳ (ಚಳ್ಳಕೆರೆ): ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಬಂದ ಕೊರೊನಾ ಶಂಕಿತರನ್ನು ಗುರುತಿಸಿ ಕ್ವಾರಂಟೈನ್ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ನೀಡಿದರು.
ತಾಲ್ಲೂಕಿನ ನನ್ನಿವಾಳ, ಸೋಮಗುದ್ದು ಹಾಗೂ ರಾಮಜೋಗಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಆಯೋಜಿಸಿದ್ದ ಕೊರೊನಾ ಎರಡನೇ ಅಲೆ ನಿಯಂತ್ರಣ ಜಾಗೃತಿ ಸಭೆಯಲ್ಲಿ ಮಾತನಾಡಿದರು.
ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡುವ ಮೂಲಕ ಗ್ರಾಮೀಣ ಜನರಲ್ಲಿ ಉಂಟಾಗಿರುವ ಭಯ–ಆತಂಕವನ್ನು ನಿವಾರಿಸಿ, ಅವರು ಎದುರಿಸುತ್ತಿರುವ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸಬೇಕು. ಕೋವಿಡ್ ತಡೆಗಟ್ಟುವ ಬಗ್ಗೆ ಎಚ್ಚರ ವಹಿಸಬೇಕು. ಸೋಂಕಿತರನ್ನು ಕೋವಿಡ್ ಕೇಂದ್ರಕ್ಕೆ ದಾಖಲಿಸಲು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಹೇಳಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಮೋಹನ್ಕುಮಾರ್, ಮುಂಗಾರು ಹಂಗಾಮಿನ ಬಿತ್ತನೆಗೆ ಒಣ ಬೇಸಾಯವನ್ನು ತೀವ್ರಗೊಳಿಸಬೇಕು. ಬೇಡಿಕೆ, ಬೆಲೆ, ಮಳೆ ಗಾಳಿಗೆ ಬೆಳೆ ಹಾನಿಯಾದಲ್ಲಿ ಕೂಡಲೇ ಇಲಾಖೆ ಗಮನಕ್ಕೆ ತರಬೇಕು ಎಂದು ರೈತರಲ್ಲಿ ಮನವಿ ಮಾಡಿದರು.
ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಡಾ.ವಿರೂಪಾಕ್ಷಪ್ಪ, ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ಸಿಡಿಪಿಒ ಮೋಹನ್ಕುಮಾರಿ ಮಾತನಾಡಿದರು. ಸಹಾಯಕ ಎಂಜಿನಿಯರ್ ಕಾವ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಂಗಸ್ವಾಮಿ, ಗೌರಮ್ಮ, ಜಯಮ್ಮ, ಸದಸ್ಯರಾದ ಚಿನ್ನಯ್ಯ, ಬಸವರಾಜ, ದೊರೆ ಪಾಪಣ್ಣ, ಪಿಡಿಒ ನಾಗರಾಜ, ಶಶಿಕಲಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.