ADVERTISEMENT

ಕೋಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಉಪವಿಭಾಗಾಧಿಕಾರಿ

ತ್ರೈಮಾಸಿಕ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆ ; ಉಪವಿಭಾಗಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2025, 7:34 IST
Last Updated 6 ನವೆಂಬರ್ 2025, 7:34 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಜಾಗೃತಿ ಬಿತ್ತಿಪತ್ರವನ್ನು ಉಪವಿಭಾಗಾಧಿಕಾರಿ ಮಹೆಬೂಬ್‌ ಜಿಲಾನಿ ಖುರೇಷಿ ಬಿಡುಗಡೆಗೊಳಿಸಿದರು
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಜಾಗೃತಿ ಬಿತ್ತಿಪತ್ರವನ್ನು ಉಪವಿಭಾಗಾಧಿಕಾರಿ ಮಹೆಬೂಬ್‌ ಜಿಲಾನಿ ಖುರೇಷಿ ಬಿಡುಗಡೆಗೊಳಿಸಿದರು   

ಚಿತ್ರದುರ್ಗ: ‘ತಂಬಾಕು ನಿಯಂತ್ರಣಕ್ಕಾಗಿ ಇರುವ ಕೋಟ್ಪಾ ಕಾಯ್ದೆಯನ್ನು ತಾಲ್ಲೂಕು ಹಂತಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಮೂಲಕ ಕಾರ್ಯಾಚರಣೆಗೆ ಗುರಿ ನಿಗದಿಪಡಿಸಿ, ಪ್ರಗತಿ ಸಾಧಿಸಬೇಕು’ ಎಂದು ಉಪವಿಭಾಗಾಧಿಕಾರಿ ಮಹೆಬೂಬ್‌ ಜಿಲಾನಿ ಖುರೇಷಿ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳ ಅಧ್ಯಕ್ಷತೆಯಲ್ಲಿ ನಿಯಮಿತವಾಗಿ ಸಮಿತಿ ಸಭೆ ನಡೆಸಬೇಕು’ ಎಂದರು.

‘ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಮಿತಿಗಳು ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಿಗೆ ಪದೇ ಪದೇ ದಾಳಿ ನಡೆಸಿ, ಕಾಯ್ದೆ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಮೂಲಕ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಜಿಲ್ಲೆಯ ದೇವಸ್ಥಾನ, ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತಗೊಳಿಸಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕನಿಷ್ಟ 30 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳೆಂದು ಡಿ.9 ರೊಳಗೆ ಘೋಷಿಸಬೇಕು’ ಎಂದು ಹೇಳಿದರು.

‘ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಪೊಲೀಸ್‌, ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನಡೆಯಬೇಕು. ತಂಬಾಕು ಕಾರ್ಯಾಚರಣೆಯಲ್ಲಿ ಸಮಿತಿಯ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು’ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ್‌ ತಿಳಿಸಿದರು.

‘ಜುಲೈನಿಂದ ಸೆಪ್ಟೆಂಬರ್‌ವರೆಗೆ ತಂಬಾಕು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 72 ಗುರಿ ನಿಗದಿಪಡಿಸಲಾಗಿದ್ದು, 23 ಪ್ರಗತಿ ಸಾಧಿಸಲಾಗಿದೆ. ಒಟ್ಟು 421 ಪ್ರಕರಣಗಳು ದಾಖಲಾಗಿದ್ದು, ₹ 44,400 ದಂಡ ವಿಧಿಸಲಾಗಿದೆ’ ಎಂದು ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಮಹಾಂತೇಶ್‌ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್‌ ಕಂಬಾಳಿಮಠ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಎಸ್‌.ಪಿ.ರವೀಂದ್ರ, ತಹಶೀಲ್ದಾರ್‌ ಗೋವಿಂದರಾಜ್‌, ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ. ಗಿರೀಶ್‌ ಇದ್ದರು.

ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಂಬಾಕು ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು. ಈ ಬಗ್ಗೆ ಬೀದಿಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸಬೇಕು.
ಮಹೆಬೂಬ್‌ ಜಿಲಾನಿ ಖುರೇಷಿ ಉಪವಿಭಾಗಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.