ಚಿತ್ರದುರ್ಗ: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 632 ಜನರು ಶುಕ್ರವಾರ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರಿಗಿಂತ ಗುಣಮುಖರಾಗುವವರ ಪ್ರಮಾಣ ಹೆಚ್ಚಾಗಿದ್ದು, ಈವರೆಗೆ 3,508 ಸೋಂಕಿತರು ಕೋವಿಡ್ ಗೆದ್ದಿದ್ದಾರೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯೂ ಸೇರಿದಂತೆ ಹಲವೆಡೆ ಇರುವ ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವರು ಶುಕ್ರವಾರ ಬಿಡುಗಡೆಯಾಗಿದ್ದಾರೆ. ಒಂದೇ ದಿನ ಇಷ್ಟು ಪ್ರಮಾಣದ ರೋಗಿಗಳು ಗುಣಮುಖರಾಗಿದ್ದು ಇದೇ ಮೊದಲು.
ಮತ್ತೊಂದೆಡೆ ಜಿಲ್ಲೆಯಲ್ಲಿ 245 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. 811 ಜನರ ಗಂಟಲು ಹಾಗೂ ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಚಿತ್ರದುರ್ಗ ತಾಲ್ಲೂಕಿನಲ್ಲಿ 125, ಚಳ್ಳಕೆರೆ 26, ಹಿರಿಯೂರು 19, ಹೊಸದುರ್ಗ 33, ಮೊಳಕಾಲ್ಮುರು 10 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 32 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 4,544ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಇದರಿಂದ ಸಾವಿನ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 1,001 ಸಕ್ರಿಯ ಪ್ರಕರಣಗಳಿವೆ. 922 ಕಂಟೈನ್ಮೆಂಟ್ ವಲಯಗಳಿವೆ. ಇನ್ನೂ 1,187 ಜನರ ವರದಿ ಬರುವುದು ಬಾಕಿ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.