
ಚಿತ್ರದುರ್ಗ: ಸವಿತಾ ಸಮುದಾಯದ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಪದಾಧಿಕಾರಿಗಳು ಮಂಗಳವಾರ ನಗರ ಠಾಣೆಯಲ್ಲಿ ದೂರು ಸಲ್ಲಿಸಿದರು.
ಸಿ.ಟಿ. ರವಿ ಅವರು ಮೊಬೈಲ್ನಲ್ಲಿ ಮಾತನಾಡುವ ವೇಳೆ ಕೆಟ್ಟ ಪದ ಬಳಸಿ ನಿಂದನೆ ಮಾಡಿದ್ದಾರೆ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಸಂವಿಧಾನಿಕ ಪದ ಬಳಸಿ ಜಾತಿ, ವೃತ್ತಿಯನ್ನು ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಇದರಿಂದ ಸವಿತಾ ಸಮಾಜಕ್ಕೆ ತೀವ್ರ ನೋವುಂಟಾಗಿದೆ. ಕೂಡಲೇ ಅವರು ಸವಿತಾ ಸಮುದಾಯಕ್ಕೆ ಕ್ಷಮೆ ಯಾಚಿಸಬೇಕು. ಜೊತೆಗೆ ಪೊಲೀಸರು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಡಿ. ಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಸವಿತಾ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಶ್ರೀನಿವಾಸ್, ಮುಖಂಡರಾದ ಅನಿಲ್ ನಾಗ್, ಪರಮೇಶ್ವರಪ್ಪ, ಡಿ.ಎನ್. ಮೈಲಾರಪ್ಪ, ರಂಜಿತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.