
ಮೊಳಕಾಲ್ಮುರು: ರೈತರು ಹಾಲು ಉತ್ಪಾದನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಶಿಮುಲ್ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಸಲಹೆ ಮಾಡಿದರು.
ತಾಲ್ಲೂಕಿನ ಕೊಂಡ್ಲಹಳ್ಳಿಯ ಹಾಲು ಉತ್ಪಾದಕರ ಮಾರಾಟ ಮತ್ತು ಸಹಕಾರ ಸಂಘದ ಆವರಣದಲ್ಲಿ ಗುರುವಾರ ಪಶುಪಾಲನಾ ಮತ್ತು ಪಶು ವೈದ್ಯ ಇಲಾಖೆ, ಜಿಲ್ಲಾ ಸಹಕಾರ ಹಾಗೂ ಹಾಲು ಉತ್ಪಾದಕರ ಒಕ್ಕೂಟ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಮಿಶ್ರತಳಿ ಹಸುಗಳ ಪ್ರದರ್ಶನ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶಿಮುಲ್ ರೈತರಿಗೆ ಹಾಲು ಉತ್ಪಾದನೆಯಲ್ಲಿ ತೊಡಗಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಿಯಾಯಿತಿ ದರದಲ್ಲಿ ಪೌಷ್ಠಿಕ ಆಹಾರ, ಸಹಾಯಧನ ಯೋಜನೆ, ವಿಮೆಯಂತಹ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಪಶು ಸಂಗೋಪನಾ ಇಲಾಖೆ ತಾಲ್ಲೂಕು ನಿರ್ದೇಶಕ ಡಾ. ರಂಗಪ್ಪ ಸರ್ಕಾರದಿಂದ ಪಶು ಸಾಕಣೆಗಾಗಿ ಜಾರಿಯಲ್ಲಿರುವ ಪ್ರೋತ್ಸಾಹ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.
ಶಿಬಿರದಲ್ಲಿ ರಾಸುಗಳ ಆರೋಗ್ಯ ತಪಾಸಣೆ ಮಾಡಿ, 46 ರಾಸುಗಳಲ್ಲಿ ಗರ್ಭಕೋಶ ಸಂಬಂಧಿತ ಕಾಯಿಲೆ ಗುರುತಿಸಿ ಚಿಕಿತ್ಸೆ ನೀಡಲಾಯಿತು.
ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಿ. ಚಂದ್ರಶೇಖರ್, ಕೆಎಂಎಫ್ ವೈದ್ಯರಾದ ಪುನಿತ್, ಸತ್ಯನಾರಾಯಣ, ಅಕ್ಷಯ್ ಕುಮಾರ್, ನರೇಶ್, ಖಲಂದರ್, ಮುಖಂಡರಾದ ಟಿ. ತಿಪ್ಪೇಸ್ವಾಮಿ, ಎ. ಮಂಜುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.