ADVERTISEMENT

ದಾವಣಗೆರೆ ರಸ್ತೆ: ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ; ಸಂಸದ ಗೋವಿಂದ ಕಾರಜೋಳ

ಶೇ 100ರಷ್ಟು ವೆಚ್ಚ ಭರಿಸುವ ಕೇಂದ್ರ ಸರ್ಕಾರ; ಸಂಸದ ಗೋವಿಂದ ಕಾರಜೋಳ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 7:25 IST
Last Updated 15 ಜುಲೈ 2025, 7:25 IST
ಚಿತ್ರದುರ್ಗ– ದಾವಣಗೆರೆ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಸಂಬಂಧ ಸಂಸದ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು
ಚಿತ್ರದುರ್ಗ– ದಾವಣಗೆರೆ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಸಂಬಂಧ ಸಂಸದ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು   

ಚಿತ್ರದುರ್ಗ: ‘ನಗರದಿಂದ ದಾವಣಗೆರೆಗೆ ತಲುಪಲು ಇದ್ದ ರೈಲ್ವೆ ಕ್ರಾಸಿಂಗ್‌ ಸಮಸ್ಯೆ ಶೀಘ್ರ ಇತ್ಯರ್ಥವಾಗಲಿದೆ. ದ್ವಿಪಥ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮತಿ ದೊರೆತಿದ್ದು, ರೈಲ್ವೆ ಎಂಜಿನಿಯರಿಂಗ್ ವಿಭಾಗದಿಂದ ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ’ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

‘ನಗರದಿಂದ ದಾವಣಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ರೈಲ್ವೆ ಗೇಟ್ ನಂ. 15ರಲ್ಲಿ ರೈಲು ಬಂದಾಗ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದರು. ರೈಲ್ವೆ ಮೇಲ್ಸೇತುವೆ ನಿರ್ಮಾಣಗೊಳ್ಳಬೇಕು ಎಂಬುದು ಬಹುಕಾಲದ ಬೇಡಿಕೆಯಾಗಿತ್ತು. ದಿನಕ್ಕೆ 30 ಬಾರಿ ರೈಲ್ವೆ ಗೇಟ್ ಬಂದ್‌ ಮಾಡುತ್ತಿದ್ದ ಕಾರಣ ವಾಹನಗಳ ದಟ್ಟಣೆ ಹೆಚ್ಚಾಗುತ್ತಿತ್ತು. ಈ ಸಮಸ್ಯೆ ಶೀಘ್ರ ಇತ್ಯರ್ಥಗೊಳ್ಳಲಿದೆ’ ಎಂದು ಹೇಳಿದರು.

ADVERTISEMENT

‘ಸಂಚಾರ ದಟ್ಟಣೆಯಿಂದ ಆಂಬುಲೆನ್ಸ್ ಸೇರಿ ಇತರ ವಾಹನಗಳ ಓಡಾಟಕ್ಕೂ ತೊಂದರೆಯಾಗಿತ್ತು. ಇದನ್ನು ತಪ್ಪಿಸಲು ದ್ವಿಪಥ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಸೂಚಿಸಿದ್ದೇನೆ. ಚತುಷ್ಪಥ ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ನಡೆಸಬೇಕಾಗುತ್ತದೆ. ಇದರ ಜೊತೆಗೆ ನಿರ್ಮಾಣದ ವೆಚ್ಚವನ್ನು ಸಹ ರಾಜ್ಯ ಸರ್ಕಾರವೇ ಭರಿಸಬೇಕಾಗುತ್ತದೆ. ಇದಕ್ಕೆ ಸಾಕಷ್ಟು ಸಮಯ ಬೇಕಾಗಲಿದೆ’ ಎಂದು ತಿಳಿಸಿದರು.

‘ದ್ವಿಪಥ ಮೇಲ್ಸೇತುವೆ ನಿರ್ಮಾಣ ಮಾಡಿದರೆ ಭಾರತ ಸರ್ಕಾರವೇ ಶೇ 100ರಷ್ಟು ಕಾಮಗಾರಿ ವೆಚ್ಚವನ್ನು ಭರಿಸಲಿದೆ. ಚತುಷ್ಪಥದ ನಿರ್ಮಾಣ ಪ್ರಸ್ತಾವವನ್ನು ಸದ್ಯಕ್ಕೆ ರದ್ದುಪಡಿಸಿ, ದ್ವಿಪಥ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲು ಅನುಮತಿ ನೀಡುವಂತೆ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ, ರೈಲ್ವೆ ಮುಖ್ಯ ಎಂಜಿನಿಯರ್, ಜಿಲ್ಲಾಧಿಕಾರಿ ಹಾಗೂ ಭೂಸ್ವಾಧೀನಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಇದರಿಂದಾಗಿ ಭೂಸ್ವಾಧೀನ ಮಾಡುವ ಪ್ರಮೇಯ ಉದ್ಭವಿಸುವುದಿಲ್ಲ’ ಎಂದರು.

‘ಜಿಲ್ಲೆಯ ಇತರೆ ಭಾಗದ ಎರಡು ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೂ ಅನುಮತಿ ನೀಡಲಾಗಿದೆ. ತಾಂತ್ರಿಕ ಅನುಮೋದನೆಗಳನ್ನು ಪೂರ್ಣಗೊಳಿಸಿ ನಿರ್ಮಾಣ ಕಾಮಗಾರಿಯ ಟೆಂಡರ್ ಕರೆಯಲಾಗುವುದು. ಒಂದು ವರ್ಷದಲ್ಲಿಯೇ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದರು.

‘ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದೆ. ಇದಕ್ಕೆ ಅಗತ್ಯ ಇರುವ ಭೂಮಿಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದೆ. ಚಿಕ್ಕಪುರ ಗ್ರಾಮದ ಸರ್ವೆ ನಂ. 101ರಲ್ಲಿ 9.30 ಎಕರೆ ಜಾಗ ಮಂಜೂರಾಗಿದೆ. ಪ್ರಸಕ್ತ ವರ್ಷದಿಂದಲೇ ತಾತ್ಕಾಲಿಕವಾಗಿ ಶಾಲೆ ಆರಂಭಿಸಲು ಪ್ರಯತ್ನ ನಡೆಸಲಾಗುತ್ತಿದೆ. ವಿದ್ಯಾಲಯ ಸ್ಥಾಪನೆ ಕುರಿತು ಕೇಂದ್ರೀಯ ವಿದ್ಯಾಲಯ ಸಮಿತಿ ವೀಕ್ಷಣಾ ವರದಿಯನ್ನು ಸಲ್ಲಿಸಿದೆ’ ಎಂದರು.

‘ವರದಿಯಲ್ಲಿ ಉಲ್ಲೇಖಿಸಿದ ಆಕ್ಷೇಪಣೆಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಜುಲೈ 18ರಂದು ಮತ್ತೊಮ್ಮೆ ಸಮಿತಿ ಸದಸ್ಯರು ಭೇಟಿ ನೀಡಿ ವೀಕ್ಷಣೆ ನಡೆಸಲಿದ್ದಾರೆ. ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಶಾಲೆ ಆರಂಭಿಸಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ನಿರ್ಮಿತಿ ಕೇಂದ್ರದಿಂದ ಮಾಡಿಕೊಡಲಾಗುವುದು. ಜಿಲ್ಲೆಗೆ ಮಂಜೂರಾಗಿರುವ ಕೇಂದ್ರೀಯ ವಿದ್ಯಾಯಲ ಕೈತಪ್ಪಿ ಹೋಗಬಾರದು. ವಿದ್ಯಾಲಯ ಸ್ಥಾಪನೆಯಿಂದ ಜಿಲ್ಲೆಯ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ರಾಷ್ಟ್ರೀಯ ಶಿಕ್ಷಣ ನೀತಿಯಡಿ ದೊರಕಲಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್.ಬಿ, ಡಿವೈಎಸ್‌ಪಿ ಪಿ.ಕೆ.ದಿನಕರ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ನಗರಸಭೆ ಪೌರಾಯುಕ್ತೆ ಎಂ. ರೇಣುಕಾ, ಲೋಕೋಪಯೋಗಿ ಇಲಾಖೆ ತಾಂತ್ರಿಕ ಸಹಾಯಕ ಮಂಜುನಾಥ ಇದ್ದರು.

ಬಹುಕಾಲದ ಬೇಡಿಕೆ ಶೀಘ್ರ ಇತ್ಯರ್ಥ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ ಗುರಿ ಕೇಂದ್ರೀಯ ವಿದ್ಯಾಲಯ ಜಾಗ ಪರಿಶೀಲನೆ

ಮುಖ್ಯಮಂತ್ರಿಯಿಂದ ರಾಜಕಾರಣ; ಆರೋಪ ‘ಸಿಗಂಧೂರು ಚೌಡೇಶ್ವರಿ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕಾರಣ ಮಾಡುತ್ತಿದ್ದಾರೆ. ಸೇತುವೆ ನಮ್ಮ ರಾಜ್ಯಕ್ಕೊಂದು ಆಸ್ತಿ ಎಂಬುದನ್ನು ಎಲ್ಲರೂ ಅರಿಯಬೇಕು. ಕಾರ್ಯಕ್ರಮಕ್ಕೆ ಆಹ್ವಾನ ಮಾಡಲು ನಿರ್ಲಕ್ಷ್ಯ ಮಾಡಿಲ್ಲ. ಆದರೂ ಈ ಕುರಿತು ಕೇಂದ್ರ ಸಚಿವರಿಗೆ ಸಿ.ಎಂ ಪತ್ರ ಬರೆದಿರುವುದು ರಾಜಕಾರಣವಾಗಿದೆ’ ಎಂದು ಗೋವಿಂದ ಕಾರಜೋಳ ದೂರಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಪ್ರಧಾನಿ ಬರುವ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಆಹ್ವಾನಿಸಲಾಗುತ್ತದೆ. ತಡವಾಗಿ ಆಹ್ವಾನಿಸಲಾಗಿದೆ ಎಂದು ಹೇಳುವುದು ಸರಿಯಲ್ಲ. ಶಿಷ್ಟಾಚಾರ ಪಾಲನೆ ವಿಷಯದಲ್ಲಿ ಕಾಂಗ್ರೆಸ್‌ ಮುಖಂಡರು ದಾಖಲೆ ಸೃಷ್ಟಿಸಿದ್ದಾರೆ. ಜಿಲ್ಲೆಯಲ್ಲಿ 198 ಕಾರ್ಯಕ್ರಮಗಳಿಗೆ ನನಗೆ ಆಹ್ವಾನವನ್ನೇ ನೀಡಿಲ್ಲ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ’ ಎಂದರು. ‘55 ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಗಾಳ’ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ‘ಕಾಂಗ್ರೆಸ್‌ ಶಾಸಕರೇ ಬಿಜೆಪಿಗೆ ಬರಲು ತಯಾರಾಗಿದ್ದಾರೆ. ಖರೀದಿಗೆ ಬನ್ನಿ ಎಂಬ ಸಂದೇಶ ನೀಡಿದ್ದಾರೆ. ಈ ಕುರಿತು ವಿಜಯಾನಂದ ಕಾಶಪ್ಪನವರ ಅವರು 55 ಶಾಸಕರ ಪಟ್ಟಿ ಬಿಡುಗಡೆ ಮಾಡಲಿ’ ಎಂದು ಸವಾಲು ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.