ಚಿತ್ರದುರ್ಗ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿ ಕುಂಠಿತಗೊಂಡಿರುವುದಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಬೇಸರ ವ್ಯಕ್ತಪಡಿಸಿದರು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತಿಂಗಳೊಳಗೆ ಪೂರ್ಣಗೊಳಿಸಲು ಸೂಚನೆ ನೀಡಿದರು.
ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ನಿಗದಿತ ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು’ ಎಂದು ತಾಕೀತು ಮಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಮತಾ, ‘2016-17ನೇ ಸಾಲಿನಲ್ಲಿ ಆಯ್ಕೆಯಾಗಿದ್ದ 40 ಗ್ರಾಮಗಳ ಪೈಕಿ ಮೂರು ಗ್ರಾಮಗಳನ್ನು ಮರು ಆಯ್ಕೆ ಮಾಡಲಾಗಿದೆ. ಇಲ್ಲಿ ₹9 ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. 2018-19ನೇ ಸಾಲಿಗೆ ಏಳು ಗ್ರಾಮಗಳನ್ನು ಗುರುತಿಸಲಾಗಿದ್ದು, ₹40 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.
2018-19ನೇ ಸಾಲಿನಲ್ಲಿ ಹೊಳಲ್ಕೆರೆ ತಾಲ್ಲೂಕಿನ ಕಾಲಘಟ್ಟ, ಹಿರಿಯೂರು ತಾಲ್ಲೂಕಿನ ಭರಮಗಿರಿ, ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೇರಹಳ್ಳಿ ಗ್ರಾಮಗಳು ಆದರ್ಶ ಗ್ರಾಮ ಯೋಜನೆಯಡಿ ಮರು ಆಯ್ಕೆ ಆಗಿವೆ. 2019-20ನೇ ಸಾಲಿಗೆ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ತಾಲ್ಲೂಕಿನ 14 ಗ್ರಾಮಗಳು ಆಯ್ಕೆ ಮಾಡಲಾಗಿದೆ.
ಶಾಲಾ ಕೊಠಡಿ ನಿರ್ಮಾಣ, ಹೊಸ ಅಂಗನವಾಡಿ ಕಟ್ಟಡ, ಅಂಗನವಾಡಿ ಕಟ್ಟಡಗಳ ದುರಸ್ಥಿ ಕಾರ್ಯ, ಸಿ.ಸಿ. ರಸ್ತೆ ಮತ್ತು ಬಾಕ್ಸ್ ಚರಂಡಿ ನಿರ್ಮಾಣ, ಸಮುದಾಯ ಭವನ, ಶುದ್ಧ ಕುಡಿಯುವ ನೀರಿನ ಘಟಕ, ಬಯಲು ರಂಗಮಂದಿರ, ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಕೆ, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಸಭೆ ಅನುಮೋದನೆ ನೀಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.