ಚಿತ್ರದುರ್ಗ: ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಸಂಚಾರಿ ಗ್ರಂಥಾಲಯ ಪ್ರಾರಂಭಿಸುವ ಅಗತ್ಯವಿದೆ. ಸುಸಜ್ಜಿತ ವಾಹನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಓದುಗರ ಅಭಿರುಚಿಗೆ ಅನುಗುಣವಾಗಿ ಗ್ರಂಥಾಲಯ ರೂಪಿಸಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪುಸ್ತಕ, ನಿಯಕಾಲಿಕೆಗಳನ್ನು ಓದುಗರಿಗೆ ಒದಗಿಸಬೇಕಿದೆ. ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಎಚ್ಚರ ವಹಿಸಬೇಕಿದೆ. ಜಿಲ್ಲಾ ಕೇಂದ್ರ ಗ್ರಂಥಾಲಯದ ಕಟ್ಟಡ ಮುಕ್ತಾಯದ ಹಂತ ತಲುಪಿದ್ದು, ಶೀಘ್ರವೇ ಕಾರ್ಯಾರಂಭ ಮಾಡಬೇಕು’ ಎಂದು ಸೂಚನೆ ನೀಡಿದರು.
ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್. ತಿಪ್ಪೇಸ್ವಾಮಿ, ‘2021-22ನೇ ಸಾಲಿನ ಪ್ರಾಧಿಕಾರದ ಬಜೆಟ್ ಗ್ರಾತ್ರ ₹ 90 ಲಕ್ಷವೆಂದು ಅಂದಾಜು ಮಾಡಲಾಗಿದೆ. ಇದರಲ್ಲಿ ₹ 68 ಲಕ್ಷ ವ್ಯಯವಾಗುವ ನಿರೀಕ್ಷೆ ಇದೆ’ ಎಂದರು.
‘ಡಿಜಿಟಲ್ ಗ್ರಂಥಾಲಯಕ್ಕೆ ಜಿಲ್ಲೆಯಲ್ಲಿ 39,375 ಓದುಗರು ನೋಂದಣಿ ಮಾಡಿಕೊಂಡಿದ್ದಾರೆ. ಇದಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳ ಪಟ್ಟಿ ಕಳುಹಿಸಿದರೆ ನೋಂದಣಿಗೆ ಅನುಕೂಲವಾಗಲಿದೆ. ನಿಯತಕಾಲಿಕೆ, ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕ ಲಭ್ಯ ಇವೆ’ ಎಂದು ಹೇಳಿದರು.
ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಬಿ.ರಾಜಶೇಖರಪ್ಪ, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ನರಸಿಂಹರಾಜು, ಸದಸ್ಯೆ ಜಿ.ಎಂ.ವಿಶಾಲಾಕ್ಷಿ, ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಸದಸ್ಯ ಪಿ.ಎಚ್. ಮುರುಗೇಶ್, ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ಆಂಜನೇಯ, ನಿವೃತ್ತ ಪ್ರಾಂಶುಪಾಲ ಎಚ್.ಲಿಂಗಪ್ಪ ಇದ್ದರು.
***
ಹೊಸದುರ್ಗದ ಶಾಖಾ ಗ್ರಂಥಾಲಯಕ್ಕೆ ನೂತನ ಕಟ್ಟಡ ನಿರ್ಮಿಸಬೇಕಿದೆ. ಇದಕ್ಕೆ ನಿವೇಶನದ ಅಗತ್ಯವಿದ್ದು, ತಹಶೀಲ್ದಾರ್ ಜತೆ ಚರ್ಚಿಸಿ ನಿವೇಶನ ಒದಗಿಸಲಾಗುವುದು.
–ಕವಿತಾ ಎಸ್.ಮನ್ನಿಕೇರಿ,ಜಿಲ್ಲಾಧಿಕಾರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.