ಹೊಸದುರ್ಗ: ‘ಮಾರ್ಚ್ ಅಂತ್ಯದೊಳಗೆ ಉಪ್ಪಾರರ ಕುಲಶಾಸ್ತ್ರೀಯ ಅಧ್ಯಯನ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾದ ನಂತರ ಏಪ್ರಿಲ್ನಲ್ಲಿ ಉಪ್ಪಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ನೀಡಬೇಕು ಎಂದು ಹಕ್ಕೊತ್ತಾಯ ಮಾಡಲು ಶ್ರೀಮಠದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಲಾಗುವುದು’ ಎಂದು ಪುರುಷೋತ್ತಮಾನಂದಪುರಿ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ಬ್ರಹ್ಮವಿದ್ಯಾನಗರ ಭಗೀರಥ ಗುರುಪೀಠದ ಆವರಣದಲ್ಲಿ ಭಾನುವಾರ ಮುಕ್ತಾಯಗೊಂಡ ಉಪ್ಪಾರರ ಕುಲಶಾಸ್ತ್ರೀಯ ಅಧ್ಯಯನ ಕಾರ್ಯಾಗಾರದ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
‘ಈಗಾಗಲೇ ಉಪ್ಪಾರರ ಕುಲಶಾಸ್ತ್ರೀಯ ಅಧ್ಯಯನದ ಮುಖ್ಯಸ್ಥ ಪ್ರೊ.ಕೆ.ಎಂ.ಮೈತ್ರಿ ಅವರು ಹಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ. ತ್ವರಿತವಾಗಿ ಅಧ್ಯಯನ ಮುಗಿಸಿ, ಸರ್ಕಾರಕ್ಕೆ ಸಮಗ್ರವಾದ ವರದಿ ಸಲ್ಲಿಸಲಿದ್ದಾರೆ.ನಂತರ ಬೀದರ್ನಿಂದ ಯಾತ್ರೆ ಕೈಗೊಂಡು ರಾಜ್ಯದಾದ್ಯಂತ ಜನಜಾಗೃತಿ ಮೂಡಿಸಲಾಗುವುದು. ಬಳಿಕ ಪಾದಯಾತ್ರೆ ಕೈಗೊಂಡು ಬೃಹತ್ ಸಮಾವೇಶ ನಡೆಸಲಾಗುವುದು. ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಬೇಡಿಕೆಯ ಶಿಫಾರಸು ಸಲ್ಲಿಸಿದ ಬಳಿಕ ದೆಹಲಿಯಲ್ಲಿ ದೇಶದ ಎಲ್ಲಾ ರಾಜ್ಯಗಳ ಮುಖಂಡರ ಸಮ್ಮುಖದಲ್ಲಿ ಬೃಹತ್ ಹೋರಾಟ ಮಾಡಲಾಗುವುದು’ ಎಂದು ಸ್ವಾಮೀಜಿ ಹೋರಾಟದ ರೂಪುರೇಷೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.