ADVERTISEMENT

ಚಿತ್ರದುರ್ಗ: ಯುಜಿಸಿ ಅನ್ವಯ ಗೌರವಧನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2021, 5:43 IST
Last Updated 31 ಡಿಸೆಂಬರ್ 2021, 5:43 IST
ಸೇವಾ ಭದ್ರತೆ ಜತೆಗೆ ಯುಜಿಸಿ ನಿಯಮಾವಳಿ ಅನ್ವಯ ಗೌರವಧನ ನೀಡಬೇಕು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಚಿತ್ರದುರ್ಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು
ಸೇವಾ ಭದ್ರತೆ ಜತೆಗೆ ಯುಜಿಸಿ ನಿಯಮಾವಳಿ ಅನ್ವಯ ಗೌರವಧನ ನೀಡಬೇಕು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಚಿತ್ರದುರ್ಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು   

ಚಿತ್ರದುರ್ಗ: ಜಿಲ್ಲೆಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಯುಜಿಸಿ ನಿಯಮಾವಳಿ ಅನ್ವಯ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದವರು ಗುರುವಾರ ಪ್ರತಿಭಟನೆ ನಡೆಸಿದರು.

ಸೇವಾ ಭದ್ರತೆ ಜತೆಗೆ ವೇತನ ಹೆಚ್ಚಿಸುವ ಮೂಲಕ ನ್ಯಾಯ ಒದಗಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ರಾಜ್ಯದಲ್ಲಿ ಸುಮಾರು 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ 14,447ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ದೇಶದ ಇತರ ರಾಜ್ಯಗಳಂತೆ ಯುಜಿಸಿ ಮಾದರಿಯಲ್ಲಿ ವೇತನ ನೀಡಬೇಕು. ನ್ಯಾಯಯುತ ಬೇಡಿಕೆಗೆ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಕೋವಿಡ್ ನಂತರ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಈಗಾಗಲೇ 70ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ಗಂಭೀರ ಕಾಯಿಲೆಗೆ ಒಳಗಾಗಿದ್ದಾರೆ. ಚಿಕಿತ್ಸೆ ಪಡೆಯಲು ಕೈಯಲ್ಲಿ ಕಾಸಿಲ್ಲದೆ, ಮೃತಪಟ್ಟವರ ಸಂಖ್ಯೆ 100 ದಾಟಿದೆ ಎಂದು ಅಳಲು ತೋಡಿಕೊಂಡರು.

ಮಹಿಳಾ ಅತಿಥಿ ಉಪನ್ಯಾಸಕರಿಗೆ ವೇತನ ಸಹಿತ ಹೆರಿಗೆ ಸೌಲಭ್ಯ ಇಲ್ಲ. ಇದಕ್ಕೂ ಅವಕಾಶ ಮಾಡಿಕೊಡಬೇಕು. ಎಲ್ಲಾ ಅತಿಥಿ ಉಪನ್ಯಾಸಕರಿಗೆ ಭದ್ರತೆ ಒದಗಿಸಬೇಕು. ಇಎಸ್ಐ, ಪಿಎಫ್‌ ಸೌಲಭ್ಯ ಕಲ್ಪಿಸಬೇಕು ಎಂಬುದಾಗಿ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.