
ಧರ್ಮಪುರ: ‘ನೀರು ಮುಗಿದು ಹೋಗುವ ಸಂಪನ್ಮೂಲವಾಗಿದ್ದು, ನಾಗರಿಕರು ನೀರಿನ ಮಹತ್ವ ತಿಳಿದುಕೊಳ್ಳಬೇಕು’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಮಂಜುನಾಥ್ ತಿಳಿಸಿದರು.
ಸಮೀಪದ ಶ್ರವಣಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೃಷಿಯಲ್ಲಿ ಹನಿ ನೀರಾವರಿ ಅಳವಡಿಕೆ ಬಗ್ಗೆ ರೈತ ಮಹಿಳೆಯರಿಗೆ ಮಾಹಿತಿ ನೀಡಿದರು.
‘ಬಯಲುಸೀಮೆ ಚಿತ್ರದುರ್ಗದಲ್ಲಿ ಸರಾಸರಿ ವಾಡಿಕೆ ಮಳೆ ಪ್ರಮಾಣ ಕಡಿಮೆ ಇದ್ದು, ನೀರಿನ ಅಭಾವವನ್ನು ಎದುರಿಸುತ್ತಿದ್ದೇವೆ. ಇದರಿಂದ 1,000 ಅಡಿವರೆಗೆ ಕೊಳವೆಬಾವಿ ಕೊರೆಯಿಸಿದರೂ ನೀರು ಸಿಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನೀರನ್ನು ಅನವಶ್ಯಕವಾಗಿ ವ್ಯರ್ಥ ಮಾಡುವುದು ತಪ್ಪು. ಅದಕ್ಕಾಗಿ ರೈತರು ನೀರಿನ ಮಹತ್ವ ತಿಳಿದುಕೊಂಡು ಕೃಷಿಯಲ್ಲಿ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಇದಕ್ಕೆ ಸರ್ಕಾರದಿಂದ ಮತ್ತು ಒಕ್ಕೂಟದಿಂದಲೂ ನಿಮಗೆ ಅನುಕೂಲ ಸಿಗಲಿದೆ’ ಎಂದು ಹೇಳಿದರು.
ಪಂಚಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ವೀರಣ್ಣ, ಧರ್ಮಸ್ಥಳ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಿದೇವಿ, ಒಕ್ಕೂಟದ ಮೇಲ್ವಿಚಾರಕಿ ಪೂಜಾ ಮಾತನಾಡಿದರು.
ಧರ್ಮಸ್ಥಳ ಒಕ್ಕೂಟದ ಉಪಾಧ್ಯಕ್ಷೆ ಇಂದಿರಮ್ಮ, ಸೇವಾ ಪ್ರತಿನಿಧಿ ವಿದ್ಯಾಶ್ರೀ, ಕಾವ್ಯಾ, ಗಂಗಮ್ಮ, ಮಹಾದೇವಮ್ಮ, ಭಾಗ್ಯಮ್ಮ, ಮುದ್ದಮ್ಮ, ಎರಗುಂಟಮ್ಮ, ವೇದಾವತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.