ಚಿತ್ರದುರ್ಗ: ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಜನರ ಕುಡಿಯುವ ನೀರಿನ ಉದ್ದೇಶಕ್ಕೆ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಮತ್ತು ಜಾನುವಾರಿಗೆ ನೀರಿನ ಕೊರತೆ ಆಗದಂತೆ ಎಚ್ಚರ ವಹಿಸುವ ಅಗತ್ಯವಿದೆ. ಜಲಾಶಯದಿಂದ ನೀರು ಹರಿಸುವಂತೆ ಜನರು ಮನವಿ ಮಾಡುತ್ತಿದ್ದಾರೆ. ನೀರು ಹರಿಸಿದರೆ ನದಿ ತಡದ ಹಳ್ಳಿಯ ಜನರಿಗೆ ಅನುಕೂಲ ಅಗುತ್ತದೆ ಎಂದು ಮನವಿ ಮಾಡಿದ್ದಾರೆ. ಜಲಾಶಯದಿಂದ ನದಿ ಮೂಲಕ ಚಳ್ಳಕೆರೆ ತಾಲ್ಲೂಕಿನ ಹಳ್ಳಿಯ ಜನರಿಗೆ ನೀರು ಹರಿಸಲು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಮೊಳಕಾಲ್ಮುರು ಕ್ಷೇತ್ರಕ್ಕೂ ನೀರು ಹರಿಸುವಂತೆ ಕಳೆದ ವರ್ಷ ಸರ್ಕಾರದ ಮನವೊಲಿಸುವಲ್ಲಿ ಸಚಿವರು ಯಶಸ್ವಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.