ADVERTISEMENT

ಒಂದೇ ಕಲ್ಲಿನಲ್ಲಿ ಮೂರು ಹಕ್ಕಿ ಹೊಡೆಯಲು ಡಿಕೆಶಿ ಯತ್ನ: ಸಚಿವ ಬಿ.ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 8:12 IST
Last Updated 12 ಜನವರಿ 2022, 8:12 IST
ಸಚಿವ ಬಿ.ಶ್ರೀರಾಮುಲು
ಸಚಿವ ಬಿ.ಶ್ರೀರಾಮುಲು   

ಚಿತ್ರದುರ್ಗ: ಮೇಕೆದಾಟು ಪಾದಯಾತ್ರೆ ನಡೆಸುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಎಂಬ ಮೂರು ಹಕ್ಕಿಗಳನ್ನು ಒಂದೇ ಕಲ್ಲಿನಲ್ಲಿ ಹೊಡೆಯಲು ಡಿ.ಕೆ.ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಕುಟುಕಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಸಂದರ್ಭದಲ್ಲಿ ಪಾದಯಾತ್ರೆ ಬೇಡ ಎಂಬುದನ್ನು ವಿರೋಧ ಪಕ್ಷದ ನಾಯಕರಿಗೆ ಸರ್ಕಾರ ಮನವರಿಕೆ ಮಾಡಿಕೊಟ್ಟಿತ್ತು. ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶದಿಂದ ಈ ಪಾದಯಾತ್ರೆ ನಡೆಸಲಾಗುತ್ತಿದೆ. ಕಾಂಗ್ರೆಸ್ ನಾಯಕರಿಗೆ ನೀರಿಗಿಂತ, ಕುರ್ಚಿ ಮುಖ್ಯವಾಗಿದೆ' ಎಂದರು.

'ಕೋವಿಡ್ ಸಂದರ್ಭದಲ್ಲಿ ಸ್ವಾರ್ಥ ರಾಜಕೀಯ ಮಾಡಲಾಗುತ್ತಿದೆ. ಅಮಾಯಕ ಜನರ ಆರೋಗ್ಯದ ಜತೆ ಕಾಂಗ್ರೆಸ್ ಆಟವಾಡುತ್ತಿದೆ. ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಲಾಗುತ್ತಿದೆ. ಎಲ್ಲೆಲ್ಲೋ ಅಡ್ಡಾಡಿ ಬಂದವರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ' ಎಂದರು.

ADVERTISEMENT

'ಸರ್ಕಾರದ ಕಾಳಜಿಯನ್ನು ಕಾಂಗ್ರೆಸ್ ಅರ್ಥ ಮಾಡಿಕೊಳ್ಳುತ್ತಿಲ್ಲ. ಅವರ ಭಂಡತನದ ಬಗ್ಗೆ ಹೈಕೋರ್ಟ್ ಗೆ ಮಾಹಿತಿ ನೀಡಲಾಗುವುದು. ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ಮಾಡುತ್ತಿದೆ. ಈ ಪಾದಯಾತ್ರೆ ಮೇಕೆದಾಟುವಿನಿಂದ ತಮಿಳುನಾಡಿಗೆ ನಡೆಯಬೇಕಿದೆ. ಅಲ್ಲಿ ಕಾಂಗ್ರೆಸ್ ಮೈತ್ರಿ ಸರ್ಕಾರವಿದ್ದು, ಅವರ ಮನವೊಲಿಸಲು ಪ್ರಯತ್ನಿಸುವುದು ಸೂಕ್ತ' ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.