
ಹಿರಿಯೂರು: ಸಮಾಜದಲ್ಲಿ ಸಮಾನತೆ ತರಲು ಶಿಕ್ಷಣವೇ ಸೂಕ್ತ ಮಾರ್ಗ ಎಂದು ಸಹಾಯಕ ಕಾನೂನು ನೆರವು ಅಭಿರಕ್ಷಕಿ ಕೆ.ಆರ್. ಸೋಮ ಹೇಳಿದರು.
ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಭಿಯೋಜನಾ ಇಲಾಖೆ ನೇತೃತ್ವದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಕಾನೂನು ಅರಿವು–ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಸಂವಿಧಾನ ಅಕ್ಷಯ ಪಾತ್ರೆ ಇದ್ದಂತೆ. ನಮಗೆ ಬೇಕಿರುವ ಸೌಲಭ್ಯಗಳನ್ನು ಪರಿಶ್ರಮದ ಮೂಲಕ ನಾವೇ ಪಡೆದುಕೊಳ್ಳಬೇಕು. ಉನ್ನತ ಶಿಕ್ಷಣದಿಂದ ಸಮಾನತೆ ತರಲು ಸಾಧ್ಯವಿದೆ. ಹಾಗಾಗಿ ಯುವ ಪೀಳಿಗೆ ತಾವು ಅಂದುಕೊಂಡ ಗುರಿ ತಲುಪಲು ಶಿಕ್ಷಣವನ್ನು ಮೆಟ್ಟಿಲಾಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಪೋಷಕರು ತಮ್ಮ ಮಕ್ಕಳನ್ನು ಸರಿಯಾದ ಹಾದಿಯಲ್ಲಿ ಸಾಗುವ ರೀತಿ ನೋಡಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಮಹಮ್ಮದ್ ಜಬೀವುಲ್ಲಾ ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಬಿ. ವೆಂಕಟೇಶ ಶಿಲ್ಪಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಜಂಟಿ ಕಾರ್ಯದರ್ಶಿ ಎಚ್.ವಿ. ಅಜಯ್, ಖಜಾಂಚಿ ಎಚ್. ಲಕ್ಷ್ಮಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.