ಚಿತ್ರದುರ್ಗ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಹಾಗೂ ಮತದಾನ ಖಾತ್ರಿಯ ವಿ.ವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಮತದಾರರಲ್ಲಿ ಚುನಾವಣಾ ಪ್ರಕ್ರಿಯೆ ವಿಷಯದಲ್ಲಿ ವಿಶ್ವಾಸ ಮೂಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ ಪ್ಯಾಟ್) ಕಾರ್ಯವೈಖರಿ ಕುರಿತಂತೆ ಮತದಾರರ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಚಾಲನೆ ಅವರು ಮಾತನಾಡಿದರು.
‘ಒಂದು ತಿಂಗಳು ಜಿಲ್ಲಾದ್ಯಂತ 1,206 ಸ್ಥಳಗಳಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಗುವುದು. ಇದರಲ್ಲಿ ಮತದಾರರು ಪಾಲ್ಗೊಂಡು ಅಣಕು ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದಾಗಿದೆ. ಯುವ ಮತದಾರರಿಗೆ ಹಾಗೂ ಮೊದಲ ಬಾರಿಗೆ ಮತದಾನ ಮಾಡುವಂತಹವರಿಗೂ ಸಹಕಾರಿಯಾಗಲಿದೆ’ ಎಂದರು.
‘ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಏಕಕಾಲಕ್ಕೆ ಜಾಗೃತಿ ಅಭಿಯಾನ ಪ್ರಾರಂಭಿಸಲಾಗಿದೆ. ಇದಕ್ಕಾಗಿ ಒಟ್ಟು 75 ವಾಹನಗಳ ವ್ಯವಸ್ಥೆ ಮಾಡಲಾಗಿದೆ. 152 ಸೆಕ್ಟರ್ ಹಾಗೂ 7 ಹೆಚ್ಚುವರಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ತೋರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ನಾಗವೇಣಿ, ಚುನಾವಣಾ ತಹಶೀಲ್ದಾರ್ ಎಂ.ಸಂತೋಷ್ ಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.