ADVERTISEMENT

ಪರ್ಯಾಯ ವಸತಿ ಸೌಲಭ್ಯಕ್ಕೆ ಆಗ್ರಹ

ಚಳ್ಳಕೆರೆ ತಾಲ್ಲೂಕಿನ ಹಾಲಗೊಂಡನಹಳ್ಳಿ ನೆರೆ ಸಂತ್ರಸ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 5:50 IST
Last Updated 21 ಸೆಪ್ಟೆಂಬರ್ 2022, 5:50 IST
ಚಳ್ಳಕೆರೆ ತಾಲ್ಲೂಕಿನ ಹಾಲಗೊಂಡನಹಳ್ಳಿಯ ನೆರೆ ಸಂತ್ರಸ್ತರು ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಚಳ್ಳಕೆರೆ ತಾಲ್ಲೂಕಿನ ಹಾಲಗೊಂಡನಹಳ್ಳಿಯ ನೆರೆ ಸಂತ್ರಸ್ತರು ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ವೇದಾವತಿ ನದಿ ತುಂಬಿ ಹರಿಯುತ್ತಿರುವುದರಿಂದ ಮನೆಗಳಿಗೆ ನೀರು ನುಗ್ಗಿದ್ದು, ಪರ್ಯಾಯ ವಸತಿ ವ್ಯವಸ್ಥೆಗೆ ಒತ್ತಾಯಿಸಿ ಚಳ್ಳಕೆರೆ ತಾಲ್ಲೂಕಿನ ಹಾಲಗೊಂಡನ ಹಳ್ಳಿಯ ನೆರೆ ಸಂತ್ರಸ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಹುಲ್ಲುಬನ್ನಿ ಕರಾಬಿನ 10 ಎಕರೆ ಭೂಮಿಯಲ್ಲಿ ವಸತಿ ಸೌಲಭ್ಯಕ್ಕೆ ಆಗ್ರಹಿಸಿದರು. ರಾಜಕೀಯ ಹಸ್ತಕ್ಷೇಪಕ್ಕೆ ಕಿವಿಗೊಡಬಾರದು ಎಂದು ಸಂತ್ರಸ್ತರು ಮನವಿ ಮಾಡಿದರು.

ವೇದಾವತಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಗ್ರಾಮದ ಪರಿಶಿಷ್ಟ ಜಾತಿ ಕಾಲೊನಿಗೆ ನೀರು ನುಗ್ಗಿದೆ. ಮನೆಗಳು ಜಲಾವೃತಗೊಂಡಿದ್ದು, ವಾಸಕ್ಕೆ ತೊಂದರೆಯಾಗಿದೆ. ಈ ಹಿಂದೆ ಹಲವು ಬಾರಿ ಸಮಸ್ಯೆ ಎದುರಾಗಿತ್ತಾದರೂ ಇಷ್ಟು ತೀವ್ರವಾಗಿ ಬಾಧಿಸಿರಲಿಲ್ಲ. ಪರ್ಯಾಯ ವಸತಿ ವ್ಯವಸ್ಥೆಗೆ ಮೀಸಲಿಟ್ಟ ಭೂಮಿಗೆ ಕೆಲ ರಾಜಕೀಯ ಮುಖಂಡರು ವಿನಾ ಕಾರಣ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಗ್ರಾಮದ ನೂರಕ್ಕೂ ಹೆಚ್ಚು ಮನೆಗಳು ನೆರೆಗೆ ನಿರಂತರವಾಗಿ ತುತ್ತಾಗುತ್ತಿವೆ. ಎರಡು ದಶಕಗಳಿಂದ ಹೋರಾಟ ನಡೆಸಿದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಇದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ.ಪ್ರಕಾಶಮೂರ್ತಿ ಅವರೂ ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.