ಹೊಸದುರ್ಗ: ‘ಮುಂದಿನ ಜನವರಿ ಅಂತ್ಯದೊಳಗೆ ಹೊಸ ವೇತನ ಆಯೋಗ ರಚಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಆಯೋಗದ ವೇತನ ಶ್ರೇಣಿ ಕೊಡಿಸಲಾಗುವುದು. ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತಹ ಯೋಜನೆ ಶೀಘ್ರ ಜಾರಿಯಾಗಲಿದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಹೇಳಿದರು.
ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೇತನ ಆಯೋಗ ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ.ನಾವು ಉತ್ತಮವಾಗಿ ಕೆಲಸ ಮಾಡುವುದರ ಮೂಲಕ ಸರ್ಕಾರಕ್ಕೆ ಬೆಂಬಲ ನೀಡಿ ಹೆಸರು ತರಬೇಕಿದೆ.ನೌಕರರ ಸಂಘಕ್ಕೆ ಬರುವ ಆದಾಯ ಸಂಘದ ಸದಸ್ಯರಿಗೆ ಬಳಕೆಯಾಗಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಮಹಿಳಾ ನೌಕರರ ಸಮಸ್ಯೆಗಳಿಗೆ ಸ್ಪಂದಿಸಬೇಕು. ತಾಲ್ಲೂಕು ಮಟ್ಟದಲ್ಲಿ ಪ್ರತಿ ತಿಂಗಳು ನೌಕರರ ಕುಂದುಕೊರತೆ ಆಲಿಸಲು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರಿಗಾಗಿ ₹ 17 ಕೋಟಿ ವೆಚ್ಚದಲ್ಲಿ ಶತಮಾನೋತ್ಸವ ಭವನವನ್ನು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
ನೌಕರರ ಕುಂದುಕೊರತೆಗೆ ಸ್ಪಂದಿಸಲಾಗುವುದು. ಸಂಘಟನೆ ಬಲಪಡಿಸಿ ಮಾದರಿ ಕಾರ್ಯಕ್ರಮಗಳನ್ನು ರೂಪಿಸ
ಲಾಗುವುದು ಎಂದುರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಲಕ್ಷ್ಮಯ್ಯ ಹೇಳಿದರು.
ಅಧ್ಯಕ್ಷರಾಗಿ ಆರ್. ಲಕ್ಷ್ಮಯ್ಯ, ರಾಜ್ಯ ಪರಿಷತ್ ಸದಸ್ಯರಾಗಿ ಶಶಿಧರ್, ಪ್ರಧಾನ ಕಾರ್ಯದರ್ಶಿಯಾಗಿ ವೀರೇಂದ್ರ ಪಾಟೀಲ್ ಮತ್ತು ಖಜಾಂಚಿಯಾಗಿ ದಿಲೀಪ್ ಕುಮಾರ್ ಅಧಿಕಾರ ವಹಿಸಿಕೊಂಡರು.
ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮೋಹನ್ ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಚಳ್ಳಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ಜಗನ್ನಾಥ, ಮೊಳಕಾಲ್ಮುರು ಘಟಕದ ಈರಣ್ಣ, ಹಿರಿಯೂರು ಘಟಕದ ಶಿವಕುಮಾರ್, ಹೊಳಲ್ಕೆರೆ ಘಟಕದ ಲೋಕೇಶ್, ಮಧುಗಿರಿ ಘಟಕದ ವೆಂಕಟೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.