ಸಾಣೇಹಳ್ಳಿ (ಹೊಸದುರ್ಗ): ‘ದರ್ಪ, ದೌರ್ಜನ್ಯ, ಅಹಂಕಾರ ತ್ಯಜಿಸಿ ಇತರರ ಸ್ವಾತಂತ್ರ್ಯವನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಜವಾಬ್ದಾರಿಯೇ ಹೊರತು ಸ್ವೇಚ್ಛೆಯಲ್ಲ. ಅದು ಸಕಲಜೀವಾತ್ಮರಿಗೆ ಒಳಿತು ಬಯಸುವುದು’ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಆವರಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
‘ಕೋವಿಡ್ ಭಯ ಇನ್ನೂ ಹೋಗುತ್ತಿಲ್ಲ. ಸಮಸ್ಯೆಗಳ ಸುಳಿಯಲ್ಲಿ ದೇಶ ಸಿಲುಕಿದೆ. ನಮಗೆ 1947 ಆಗಸ್ಟ್ 14ರ ಮಧ್ಯರಾತ್ರಿ ಸ್ವಾತಂತ್ರ್ಯ ಬಂತು ಎಂದು ಹೇಳುತ್ತೇವೆ. ಆದರೆ, ನಾವು ಸ್ವಾತಂತ್ರ್ಯವನ್ನು ಕಳೆದುಕೊಂಡದ್ದಾದರೂ ಯಾವಾಗ ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ. ಇಂದು ರಾಜಕೀಯವಾಗಿ ಸ್ವಾತಂತ್ರ್ಯ ಬಂದರೂ ಮನೆ, ಮಠ, ಸಮಾಜದಲ್ಲಿ ವ್ಯಕ್ತಿಗತವಾಗಿ ಸ್ವಾತಂತ್ರ್ಯ ಕಳೆದುಕೊಂಡಿದ್ದೇವೆ’ ಎಂದು ಹೇಳಿದರು.
ಕನ್ನಡ ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಡಿ.ಎಸ್. ಶಿವಸ್ವರೂಪ್ ಮತ್ತು ಇಂಗ್ಲಿಷ್ ಮಾಧ್ಯಮದ ಎಚ್.ಟಿ.ವಂದನಾ ಮತ್ತು ಎಲ್.ಎಸ್.ವೈಷ್ಣವಿ ಅವರನ್ನು ಅಭಿನಂದಿಸಲಾಯಿತು. ಅಧ್ಯಾಪಕಿ ಸೌಮ್ಯ ಕಾರ್ಯಕ್ರಮ ನಡೆಸಿಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.