ಹೊಳಲ್ಕೆರೆ: ಕಾರ್ಮಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಸ್. ಸರವಣನ್ ಹೇಳಿದರು.
ಪಟ್ಟಣದಲ್ಲಿ ಭಾನುವಾರ ನಡೆದ ಕಾರ್ಮಿಕರ ದಿನಾಚರಣೆ ಹಾಗೂ ಕಾನೂನು ಅರಿವುಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಸೌಲಭ್ಯ ಪಡೆಯಲು ಕಾರ್ಮಿಕರು ಕಡ್ಡಾಯವಾಗಿ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆಗ ಮಾತ್ರ ಮಕ್ಕಳ ವಿದ್ಯಾಭ್ಯಾಸ, ಅಪಘಾತ ಪರಿಹಾರ, ಸಹಾಯಧನ, ಪರಿಹಾರ ಮತ್ತಿತರ ಸೌಲಭ್ಯಗಳನ್ನು ಪಡೆಯಬಹುದು ಎಂದರು.
ಬಾಲಕಾರ್ಮಿಕ ಪದ್ಧತಿ ಕಾನೂನು ಬಾಹಿರವಾಗಿದೆ. 14 ವರ್ಷದ ಒಳಗಿನ ಮಕ್ಕಳನ್ನು ದುಡಿಮೆಗೆ ಹಚ್ಚುವುದು ಅಪರಾಧ. ಇದಕ್ಕೆ ₹ 20ರಿಂದ
₹ 50 ಸಾವಿರ ದಂಡ ಹಾಗೂ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಮಕ್ಕಳನ್ನು ಕೂಲಿಯ ಬದಲು ಶಾಲೆಗೆ ಕಳುಹಿಸಿ ಎಂದು ಹೇಳಿದರು.
ಉಪನ್ಯಾಸ ನೀಡಿದ ವಕೀಲ ಆರ್. ಹನುಮಂತಪ್ಪ, ‘ಕಾರ್ಮಿಕರಿಗೆ ಹಲವು ಸೌಲಭ್ಯಗಳಿವೆ. ಮಹಿಳಾ ಕಾರ್ಮಿಕರು ಹೆರಿಗೆ ಭತ್ಯೆ, ಹೆರಿಗೆ ರಜೆ, ಹಾಲುಣಿಸಲು ಅವಕಾಶ, ವಿಮೆ, ಭವಿಷ್ಯ ನಿಧಿ ಪಡೆಯಬಹುದು. ಕಾರ್ಮಿಕರಿಗೆ ಕನಿಷ್ಠ ಕೂಲಿ ಕೊಡಬೇಕು. ಪುರುಷ ಹಾಗೂ ಮಹಿಳಾ ಕಾರ್ಮಿಕರಿಗೆ ಸಮಾನ ವೇತನ ನೀಡಬೇಕು. ಮಹಿಳಾ ಕಾರ್ಮಿಕರಿಗೆ ಶೌಚಾಲಯ ಸೇರಿ ಅಗತ್ಯ ಸೌಲಭ್ಯಗಳನ್ನು ನೀಡಬೇಕು’ ಎಂದರು.
ವಕೀಲರ ಸಂಘದ ಅಧ್ಯಕ್ಷ ಎಲ್.ಕೆ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಪುರಸಭೆ ಮುಖ್ಯಾಧಿಕಾರಿ ಎ. ವಾಸಿಂ, ವಕೀಲರ ಸಂಘದ ಕಾರ್ಯದರ್ಶಿ ಸಿದ್ದೇಶ್, ಹೆಚ್ಚುವರಿ ಸರ್ಕಾರಿ ವಕೀಲ ಜಿ.ಎಚ್. ಶಿವಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.