ADVERTISEMENT

ಪೂರ್ಣಿಮಾಗೆ ಸಚಿವ ಸ್ಥಾನ ನೀಡಿ: ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 17:30 IST
Last Updated 13 ಡಿಸೆಂಬರ್ 2019, 17:30 IST
ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ
ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ   

ಚಿತ್ರದುರ್ಗ: ‘ಯಾದವ ಗೊಲ್ಲ ಸಮುದಾಯದ ರಾಜ್ಯದ ಏಕೈಕ ಶಾಸಕಿ ಆಗಿರುವ ಪೂರ್ಣಿಮಾ ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಬೇಕು’ ಎಂದು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಒತ್ತಾಯಿಸಿದರು.

‘ಉಪಚುನಾವಣೆಯಲ್ಲಿ ನಮ್ಮ ಸಮುದಾಯದವರು ನಿರೀಕ್ಷೆಗೂ ಮೀರಿ ಬಿಜೆಪಿಗೆ ಮತ ಚಲಾಯಿಸುವ ಮೂಲಕ ಬೆಂಬಲ ನೀಡಿದ್ದು, 12 ಕ್ಷೇತ್ರಗಳ ಗೆಲುವಿಗೆ ಕಾರಣವಾಗಿದೆ. ಆದ್ದರಿಂದ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಪೂರ್ಣಿಮಾ ಅವರಿಗೂ ಸಚಿವ ಸ್ಥಾನದ ಅವಕಾಶ ಮಾಡಿಕೊಡಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

‘ತಿಂಗಳ ಹಿಂದೆಯೇ ಸಿಎಂ ಬಳಿಗೆ ನಿಯೋಗ ಹೋಗಿ ಗೊಲ್ಲ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಕೋರಲಾಗಿತ್ತು. ಸ್ಥಿರ ಸರ್ಕಾರ ಬಂದ ನಂತರ ಪೂರ್ಣಿಮಾಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಯಡಿಯೂರಪ್ಪ ಅವರು ರಾಜ್ಯದ ಎಲ್ಲ ಸಮುದಾಯಕ್ಕೂ ಸಾಮಾಜಿಕ ನ್ಯಾಯ ನೀಡುತ್ತಾ ಬಂದಿದ್ದಾರೆ. ಯಾದವ ಸಮುದಾಯ ಅಸಂಘಟಿತವಾಗಿದ್ದು, ಸಚಿವ ಸ್ಥಾನ ನೀಡಿದರೆ ಸಮುದಾಯವೂ ಸಹ ಬಲಿಷ್ಠವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಒಂದು ವೇಳೆ ನೀಡದಿದ್ದರೆ, ಮತ್ತೊಮ್ಮೆ ರಾಜ್ಯದ ಮುಖಂಡರೊಂದಿಗೆ ನಿಯೋಗ ಹೋಗಿ ಮನವಿ ಮಾಡಲಾಗುವುದು’ ಎಂದರು.

ಯಾದವ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್, ರಾಜ್ಯ ಘಟಕದ ಉಪಾಧ್ಯಕ್ಷ ಸಿದ್ದಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಸುರೇಶ್, ಮುಖಂಡರಾದ ನಂಜಪ್ಪ, ತಮ್ಮಯ್ಯ, ಆರ್. ವೆಂಕಟೇಶ್, ಚಿಕ್ಕಪ್ಪ, ಚಂದ್ರಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.