ADVERTISEMENT

ರೈತರ ಹೋರಾಟ ದಿಕ್ಕು ತಪ್ಪಿಸುತ್ತಿರುವ ಸರ್ಕಾರ: ರಾಜ್ಯ ರೈತಸಂಘ ಮತ್ತು ಹಸಿರುಸೇನೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2021, 13:54 IST
Last Updated 30 ಜನವರಿ 2021, 13:54 IST
ಮೊಳಕಾಲ್ಮುರಿನಲ್ಲಿ ಶನಿವಾರ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಮೊಳಕಾಲ್ಮುರಿನಲ್ಲಿ ಶನಿವಾರ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಮೊಳಕಾಲ್ಮುರು: ನೂತನವಾಗಿ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ದಿಕ್ಕು ತಪ್ಪಿಸಲು ಕೇಂದ್ರದ ಬಿಜೆಪಿಸರ್ಕಾರ ಹುನ್ನಾರ ನಡೆಸಿದೆ ಎಂದು ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಮುಖಂಡರು ಆರೋಪಿಸಿದರು.

ಶನಿವಾರ ಪ್ರತಿಭಟನೆ ನಡೆಸಿದ ಸಂಘದ ಕಾರ್ಯಕರ್ತರು ಎರಡು ತಿಂಗಳಿನಿಂದ ಕಾಯ್ದೆಗಳನ್ನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ.ಹೋರಾಟದ ಕಾವು ಏರುತ್ತಿರುವುದನ್ನು ಮನಗಂಡ ಕೇಂದ್ರ ಸರ್ಕಾರ ಪ್ರತಿಭಟನೆ ದಿಕ್ಕು ತಪ್ಪಿಸಲು ಗಣರಾಜ್ಯೋತ್ಸವ ದಿನ ನಡೆದ ಪ್ರತಿಭಟನೆಯಲ್ಲಿ ಕೆಲ ಖಾಸಗಿ ವ್ಯಕ್ತಿಗಳನ್ನು ನುಗ್ಗಿಸಿ ಕೆಂಪುಕೋಟೆ ಮೇಲೆ ಬೇರೆ ಧ್ವಜ ಹಾರಾಡುವ ಕೆಲಸ ಮಾಡಿಸಿದೆ. ಇದು ಇಡೀ ದೇಶಕ್ಕೆ ಮಾಡಿರುವ ಅವಮಾನ. ಇಂತಹ ಕುತಂತ್ರಗಳನ್ನು ಕೈಬಿಟ್ಟು ಕೂಡಲೇ ಕಾಯ್ದೆಗಳನ್ನು ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಕೃಷಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ರದ್ದುಪಡಿಸಬೇಕು. ಕೇಂದ್ರ ಮತ್ತು ರಾಜ್ಯಸರ್ಕಾರ ಈಗ ಮಂಡಿಸಲಿರುವ ಬಜೆಟ್‌ನಲ್ಲಿರೈತರು ಹಾಗೂ ಕೃಷಿ ಕಾರ್ಮಿಕರ ಸಾಲ ಮನ್ನಾ ಮಾಡಬೇಕು. ಸರಳ ದಾಖಲಾತಿಯೊಂದಿಗೆ ಹೊಸ ಸಾಲ ನೀಡಬೇಕು. ಸಾಲ ಮನ್ನಾಕ್ಕೆ ಕಾಲಮಿತಿ ಹಾಕಿ ಮನ್ನಾ ಮಾಡಬೇಕು. ಬಾಕಿ ಇರುವ ಬೆಳೆವಿಮೆ ತಕ್ಷಣ ಬಿಡುಗಡೆ ಮಾಡಬೇಕು. ಭದ್ರಾಮೇಲ್ದಂಡೆ ಕಾರ್ಯಕ್ಕೆ ಚುರುಕು ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಕಟ್ಟಡ ಕಾರ್ಮಿಕರ ನೋಂದಣಿಗೆ ಕಾನೂನು ಸಡಿಲಿಸಬೇಕು. ಸಾಮಾಜಿಕ ಪಿಂಚಣಿಯ ವೇತನವನ್ನು ಸಕಾಲಕ್ಕೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕು ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮುಖಂಡರಾದ ‌ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಬೆಳಗಲ್ ಈಶ್ವರಯ್ಯ ಸ್ವಾಮಿ, ಜಾಫರ್ ಷರೀಫ್, ಮರ್ಲಹಳ್ಳಿ ರವಿಕುಮಾರ್, ಕೆ. ಚಂದ್ರಣ್ಣ, ಚಂದ್ರಶೇಖರ ನಾಯ್ಕ, ಕೃಷ್ಣಮೂರ್ತಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.