
ಚಿತ್ರದುರ್ಗ: ‘ಕಾಂಗ್ರೆಸ್ನಲ್ಲಿ ಇರುವಂತಹ ಗಾಂಧಿಗಳು ಎಲ್ಲಾ ನಕಲಿ ಗಾಂಧಿಗಳಿದ್ದಾರೆ. ಇವರು ಮಹಾತ್ಮನ ಹೆಸರು ಉಳಿಸಲು ಅಲ್ಲ ,ಅಳಿಸಲು ಇದ್ದಾರೆ’ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.
‘ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಸಮಯದಲ್ಲಿ ದೇಶವು ಸ್ವರಾಜ್ಯ ಮತ್ತು ಗ್ರಾಮ ಅಭಿವೃದ್ಧಿಯಾಗಬೇಕೆಂಬ ಕನಸು ಕಂಡಿದ್ದರು. ಅದನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡಲು ಮುಂದಾಗಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
‘ಕಾಂಗ್ರೆಸ್ನಲ್ಲಿ ಇರುವಂತಹ ಗಾಂಧಿಗಳು ಯಾರೂ ಸಹ ಗಾಂಧೀಜಿ ವಂಶಸ್ಥರಲ್ಲ. ಅವರ ಹೆಸರಿನ ಮೇಲೆ ರಾಜಕೀಯ ಮಾಡುತ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇದರಲ್ಲಿ ಮಹಾತ್ಮ ಗಾಂಧೀಜಿಯವರ ನೆನಪು ಸಹ ಇಲ್ಲ’ ಎಂದು ಕಿಡಿಕಾರಿದರು.
‘ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಬಿ ಜಿ ರಾಮ್ ಜೀ (ವಿಕಸಿತ ಭಾರತ–ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ ಯೋಜನೆ) ಕಾಂಗ್ರೆಸ್ಗೆ ನುಂಗಲಾರದ ತುತ್ತಾಗಿದೆ. ಇಷ್ಟು ವರ್ಷಗಳ ಕಾಲ ಉದ್ಯೋಗ ಖಾತ್ರಿ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ಯಾವುದೇ ಆಸ್ತಿ ಸೃಷ್ಟಿ ಮಾಡಲು ಸಾಧ್ಯವಾಗಿಲ್ಲ. ಉದ್ಯೋಗ ಚೀಟಿಗಳ ಹೆಸರಿನಲ್ಲಿ ನಡೆಯುತ್ತಿದ್ದ ವ್ಯಾಪಕ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡುವ ಉದ್ದೇಶದಿಂದ ಯೋಜನೆಗೆ ಹೊಸ ರೂಪ ನೀಡಲಾಗಿದೆ’ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಸುರೇಶ್, ಖಜಾಂಚಿ ಮಾಧುರಿ ಗಿರೀಶ್, ಮಾಜಿ ಅಧ್ಯಕ್ಷ ಎ.ಮುರಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.