ADVERTISEMENT

ಚಿತ್ರದುರ್ಗ: ಸ್ವಸಹಾಯ ಗುಂಪುಗಳ ವ್ಯಾಪ್ತಿಗೆ ‘ಗೃಹಲಕ್ಷ್ಮಿ’ಯರು

ಜಿಲ್ಲಾ ಸಲಹಾ ಸಮಿತಿ ತ್ರೈಮಾಸಿಕ ಸಭೆ; ಜಿಪಂ ಉಪಕಾರ್ಯದರ್ಶಿ ರಂಗಸ್ವಾಮಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 15:54 IST
Last Updated 27 ಜೂನ್ 2025, 15:54 IST
ಚಿತ್ರದುರ್ಗದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಸಲಹಾ ಸಮಿತಿ ತ್ರೈಮಾಸಿಕ ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ರಂಗಸ್ವಾಮಿ ಮಾತನಾಡಿದರು
ಚಿತ್ರದುರ್ಗದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಸಲಹಾ ಸಮಿತಿ ತ್ರೈಮಾಸಿಕ ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ರಂಗಸ್ವಾಮಿ ಮಾತನಾಡಿದರು   

ಚಿತ್ರದುರ್ಗ: ‘ಗೃಹಲಕ್ಷ್ಮಿ ಯೋಜನೆಯ ಅರ್ಹ ಮಹಿಳಾ ಫಲಾನುಭವಿಗಳನ್ನು ಸ್ವ ಸಹಾಯ ಗುಂಪುಗಳ ವ್ಯಾಪ್ತಿಗೆ ತರಲಾಗುತ್ತದೆ. ಬಳಿಕ ವಿಮಾ ಯೋಜನೆಗಳ ಅಡಿಯಲ್ಲಿ ನೋಂದಣಿ ಮಾಡಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಂಗಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ ನೇತೃತ್ವದಲ್ಲಿ ಆಯೋಜಿಸಿದ್ದ ಜಿಲ್ಲಾ ಹಂತದ ಪುನರ್‌ ಪರಿಶೀಲನಾ ಸಮಿತಿ , ಜಿಲ್ಲಾ ಸಲಹಾ ಸಮಿತಿ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಧಾನ ಮಂತ್ರಿ ಜೀವನ್‌ ಜ್ಯೋತಿ ಜೀವನ್‌ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಅಟಲ್‌ ಪಿಂಚಣಿ ಯೋಜನೆ ಅಡಿಯಲ್ಲಿ ಫಲಾನುಭವಿಗಳನ್ನು ನೋಂದಣಿ ಮಾಡಿಸಲಾಗುವುದು’ ಎಂದರು.

‘ಮಹಿಳೆಯರು ಸಣ್ಣ ಉದ್ದಿಮೆಗಳನ್ನು ಸ್ಥಾಪಿಸಲು ಸಹಾಯ ಧನ ಹಾಗೂ ಸಬ್ಸಿಡಿ ನೀಡಲಾಗುತ್ತಿದೆ. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ ಅಡಿ ಸ್ವ–ಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಈ ಗುಂಪುಗಳನ್ನು ಬ್ಯಾಂಕ್‌ಗಳೊಂದಿಗೆ ಜೋಡಿಸಿ, ಆರ್ಥಿಕ ವ್ಯವಹಾರಗಳಲ್ಲಿ ಪಾಲ್ಗೊಳ್ಳುವಂತೆ ಮಾಡಲು, 184 ಬ್ಯಾಂಕ್ ಸಖಿಯರಿಗೆ ತರಬೇತಿ ನೀಡಲಾಗಿದೆ. ಮುಂದಿನ ಹಂತದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬ್ಯಾಂಕ್‌ಗಳಿಗೆ ಬ್ಯಾಂಕ್ ಸಖಿಯರನ್ನು ನೇಮಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಮೈಕ್ರೋ ಫೈನಾನ್ಸ್‌ಗಳಲ್ಲಿ ಮಹಿಳೆಯರು ಹೆಚ್ಚಿನ ಬಡ್ಡಿಗೆ ಸಾಲ ಪಡೆಯುವ ಬದಲು, ಸ್ವಸಹಾಯ ಗುಂಪಿನ ಮೂಲಕ ಸಾಲ ಪಡೆದು ಉದ್ದಿಮೆ ನಡೆಸಿ ಆರ್ಥಿಕ ಸಬಲರಾಗಲು ಅವಕಾಶವಿದೆ. ಜಿಲ್ಲೆಯಲ್ಲಿ 13 ಸಾವಿರಕ್ಕೂ ಅಧಿಕ ಸ್ವ ಸಹಾಯ ಗುಂಪುಗಳಿದ್ದು, ಕೇವಲ 144 ಮಾತ್ರ ಬ್ಯಾಂಕ್‌ಗಳಿಗೆ ಸಾಲ ಮರುಪಾವತಿ ಮಾಡದೇ ಅನುತ್ಪಾದಕ ಎನಿಸಿವೆ. ಈ ಪ್ರಮಾಣ ಬೇರೆ ಸಾಲ ವ್ಯವಹಾರಗಳಿಗೆ ಹೋಲಿಸಿದರೆ ನಗಣ್ಯ ಎನಿಸುವಷ್ಟಿದೆ’ ಎಂದರು.

‘ಜಿಲ್ಲೆಯಲ್ಲಿ 16,59,456 ಜನಸಂಖ್ಯೆಯಿದ್ದು, ಪಿಎಂಜೆಜೆವೈ ಅಡಿ 2,05,924, ಪಿಎಂಎಸ್‌ಬಿವೈ ಅಡಿ 4,99,155 ಹಾಗೂ ಎಪಿವೈ ಅಡಿ 1,14,161 ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಇನ್ನೂ ಸಾಕಷ್ಟು ಜನರನ್ನು ನೋಂದಣಿ ಮಾಡಲು ಅವಕಾಶವಿದೆ. ಆರ್ಥಿಕತೆ ಒಳಗೊಳ್ಳುವಿಕೆ ಮಟ್ಟ ಹೆಚ್ಚಿಸಲು ಜುಲೈ 1 ರಿಂದ ಸೆಪ್ಟಂಬರ್‌ 30 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವತಿಯಿಂದ ಆಂದೋಲನ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಯೋಗೀಶ್‌ ಮಾಹಿತಿ ನೀಡಿದರು.

‘ಸ್ಥಳೀಯ ಗ್ರಾಮ ಪಂಚಾಯಿತಿಗಳ ಸಹಯೋಗದೊಂದಿಗೆ ವಿಮಾ ಯೋಜನೆಗಳ ನೋಂದಣಿಗೆ ಹೆಚ್ಚಿನ ಶ್ರಮ ವಹಿಸಬೇಕು. ಬ್ಯಾಂಕ್‌ಗಳು ಯಾವುದೇ ಕಾರಣಕ್ಕೂ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳ ಖಾತೆ ಜಮೆಯಾಗುವ ಹಣವನ್ನು ಸಾಲದ ಕಂತಿಗೆ ವಜಾ ಮಾಡಿಕೊಳ್ಳಬಾರದು’ ಎಂದು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಎಂ.ರಾಘವೇಂದ್ರ ತಿಳಿಸಿದರು.

‘ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣ ಉದ್ದಿಮೆಗಳ ಔಪಚಾರಿಕರಣ ಅಡಿ ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ 100 ಘಟಕಗಳ ಗುರಿ ನಿಗದಿ ಮಾಡಲಾಗಿದೆ. ಇದರಲ್ಲಿ 88 ಅರ್ಜಿ ಸ್ವೀಕೃತವಾಗಿವೆ. 50 ಅರ್ಜಿಗಳಿಗೆ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ದೊರಕಿದೆ. 30 ಅರ್ಜಿಗಳ ಮಂಜೂರಾತಿ ಬಾಕಿಯಿದೆ. ಯೋಜನೆಯಡಿ ಘಟಕ ವೆಚ್ಚಕ್ಕೆ ಪಡೆಯುವ ಸಾಲ ಸೌಲಭ್ಯದ ಶೇ 35ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಬ್ಯಾಂಕ್‌ಗಳ ಮುಂದಿರುವ ಬಾಕಿ ಅರ್ಜಿಗಳ ವಿಲೇವಾರಿ ಮಾಡಬೇಕು’ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಹೇಳಿದರು.

ಕೆನರಾ ಬ್ಯಾಂಕ್‌ ವಲಯ ಪ್ರಬಂಧಕಿ ಅನಿತಾ, ಆರ್‌ಬಿಐ ಪ್ರಬಂಧಕ ಅರುಣ್‌ ಕುಮಾರ್‌, ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ಕೆ.ವಿನಂತ್‌, ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್ ಪ್ರಬಂಧಕ ಜನಾರ್ದನ್ ಇದ್ದರು.

2024-25ನೇ ಸಾಲಿನಲ್ಲಿ 2423 ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ನೀಡಿ ನೂರರಷ್ಟು ಗುರಿ ಸಾಧಿಸಲಾಗಿದೆ. ಪ್ರಸಕ್ತ ಸಾಲಿಗೆ 6766 ಗುಂಪುಗಳ ಗುರಿ ನಿಗದಿ ಪಡಿಸಲಾಗಿದೆ. ಈ ಪೈಕಿ 225ಕ್ಕೆ ಸಾಲ ಸೌಲಭ್ಯ ನೀಡಲಾಗಿದೆ.
– ಯೋಗೀಶ್‌, ಕಾರ್ಯಕ್ರಮ ಅನುಷ್ಠಾನಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.