ADVERTISEMENT

ಅತಿಥಿ ಉಪನ್ಯಾಸಕರಿಂದ ತರಗತಿ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 4:26 IST
Last Updated 12 ಡಿಸೆಂಬರ್ 2021, 4:26 IST
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಹಿರಿಯೂರಿನಲ್ಲಿ ಅತಿಥಿ ಉಪನ್ಯಾಸಕರು ಶನಿವಾರ ತರಗತಿ ಬಹಿಷ್ಕರಿಸಿ ಪ್ರಾಂಶುಪಾಲ ಚಂದ್ರಶೇಖರಪ್ಪ ಅವರಿಗೆ ಮನವಿ ಸಲ್ಲಿಸಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಹಿರಿಯೂರಿನಲ್ಲಿ ಅತಿಥಿ ಉಪನ್ಯಾಸಕರು ಶನಿವಾರ ತರಗತಿ ಬಹಿಷ್ಕರಿಸಿ ಪ್ರಾಂಶುಪಾಲ ಚಂದ್ರಶೇಖರಪ್ಪ ಅವರಿಗೆ ಮನವಿ ಸಲ್ಲಿಸಿದರು.   

ಹಿರಿಯೂರು: ಸೇವಾಭದ್ರತೆ, ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಗರದ ಹುಳಿಯಾರು ರಸ್ತೆಯಲ್ಲಿರುವ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಶನಿವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

‘ಪೂರ್ಣಾವಧಿ ಕೆಲಸ ಮಾಡಿಸಿಕೊಂಡು ಅಲ್ಪ ಪ್ರಮಾಣದ ವೇತನ ನೀಡುವ ಮೂಲಕ ಸರ್ಕಾರ ಸ್ನಾತಕೋತ್ತರ ಪದವೀಧರರು, ಪಿಎಚ್‌ಡಿ ಪದವಿ, ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಅವಮಾನಿಸುತ್ತಿದೆ. ಸರ್ಕಾರಿ ಉದ್ಯೋಗ ಪಡೆಯಲು ಅಗತ್ಯ ವಯೋಮಿತಿ ಮೀರುತ್ತಿದೆ. ಹೀಗಾಗಿ ತಮಗೆ ಸೇವಾಭದ್ರತೆ ನೀಡಬೇಕು. ವೇತನ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

‘ವಿದ್ಯಾರ್ಥಿಗಳಿಗೆ ತೊಂದರೆ ಕೊಡಬೇಕೆಂಬ ಉದ್ದೇಶ ತಮ್ಮದಲ್ಲ. ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲು ತರಗತಿ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದೇವೆ. ಪೋಷಕರು, ವಿದ್ಯಾರ್ಥಿಗಳು ಬೆಂಬಲಿಸಬೇಕು’ ಎಂದು ಪ್ರತಿಭಟನಕಾರರು ಮನವಿ ಮಾಡಿದರು. ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಆರ್. ಶಿವಣ್ಣ, ಉಪನ್ಯಾಸಕರಾದ ದಯಾನಂದ್, ಜಯಶ್ರೀ, ನಿಶಾಫಾತಿಮಾ ಅವರೂ ಈ ಸಂದರ್ಭದಲ್ಲಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.