ಮೊಳಕಾಲ್ಮುರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಳಕು ಹೋಬಳಿ ಗೌರಸಮುದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆರೋಗ್ಯ ಉಪಕೇಂದ್ರವು 6 ತಿಂಗಳಿನಿಂದ ಮುಚ್ಚಿದ್ದು, ಆರೋಗ್ಯ ಸೇವೆಗಳಿಗೆ ತೀವ್ರ ತೊಂದರೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಮಾರಮ್ಮದೇವಿ ನೆಲೆಸಿರುವ ಗ್ರಾಮವಾದ ಇದು ಸೀಮಾಂಧ್ರ ಗಡಿಯಲ್ಲಿದೆ. 10ಕ್ಕೂ ಹೆಚ್ಚು ಗ್ರಾಮಗಳಿಗೆ ಮತ್ತು ಹಟ್ಟಿಗಳಿಗೆ ಗೌರಸಮುದ್ರ ಕೇಂದ್ರ ಸ್ಥಳವಾಗಿದೆ. ಜತೆಗೆ ನಿತ್ಯ ನೂರಾರು ಭಕ್ತರು ಇಲ್ಲಿಗೆ ಬಂದು ಹೋಗುತ್ತಾರೆ. ಪರಿಶಿಷ್ಟ ಜಾತಿ, ಪಂಗಡ, ಕೂಲಿ ಕಾರ್ಮಿಕರು ಹೆಚ್ಚು ವಾಸವಿದ್ದಾರೆ. ಈ ಉಪ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು ಎಂದು ಗ್ರಾಮ ಪಂಚಾಯಿತಿ ಸಿದ್ಧತೆ ನಡೆಸುವಾಗಲೇ ಉಪಕೇಂದ್ರ ಮುಚ್ಚಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ದೂರಲಾಗಿದೆ.
‘ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಈ ಉಪಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ, ಗರ್ಭಿಣಿಯರಿಗೆ ಚಿಕಿತ್ಸೆ, ಮಗುವಿಗೆ ಲಸಿಕೆ ದೊರೆಯುತ್ತಿತ್ತು. ಆಧಾರ್ ಕಾರ್ಡ್ ಹಾಗೂ ಗರ್ಭಿಣಿಯರ ಕಾರ್ಡ್ ಆಧಾರದಲ್ಲಿ ಸೇವೆ ನೀಡುವ ಕಾರಣ ಬೇರೆ ಕೇಂದ್ರಗಳಿಗೆ ಹೋಗಿ ಚಿಕಿತ್ಸೆ ಪಡೆಯುವುದು ಕಷ್ಟ. ಜತೆಗೆ ಇಲ್ಲಿ ಸಾರಿಗೆ ಅವ್ಯವಸ್ಥೆ ಕಾಡುತ್ತಿದೆ. ಇದರಿಂದ ಬೇರೆ ಕಡೆ ಹೋಗಲು ಸಾಧ್ಯವಾಗುತ್ತಿಲ್ಲ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಶಶಿಕುಮಾರ್ ಹೇಳಿದರು.
‘6 ತಿಂಗಳ ಹಿಂದೆ ಇಲ್ಲಿದ್ದ ಇಬ್ಬರು ಸಿಬ್ಬಂದಿ ವರ್ಗಾವಣೆಯಾದ ನಂತರ ಸಮಸ್ಯೆ ಆರಂಭವಾಗಿದೆ. ಈ ಬಗ್ಗೆ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ವಿಚಾರಿಸಿದರೆ, ‘ಇದು ಸರ್ಕಾರ ಮಟ್ಟದ ನಿರ್ಧಾರ. ನಮ್ಮ ಕೈಯಲ್ಲಿ ಇಲ್ಲ’ ಎಂದು ಹಾರಿಕೆ ಉತ್ತರ ನೀಡುತ್ತಾರೆ. ಸಮಸ್ಯೆಯನ್ನು ಯಾರ ಬಳಿಯಾದರೂ ಹೇಳಿ ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಾರೆ. ಪರ್ಯಾಯ ವ್ಯವಸ್ಥೆ ಮಾಡದೇ ವರ್ಗಾವಣೆ ಮಾಡಿದರೆ ಹೇಗೆ?’ ಎಂದು ಪ್ರಶ್ನಿಸಿದರು.
‘ಈಚೆಗೆ ರಾಜ್ಯ ಸರ್ಕಾರ ಎನ್ಎಚ್ಎಂ ಯೋಜನೆ ಸಿಬ್ಬಂದಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ವರ್ಗಾವಣೆ ಮಾಡಿಕೊಳ್ಳಲು ಅವಕಾಶ ನೀಡಿದ ಪರಿಣಾಮ ಇಲ್ಲಿನ ಸಿಬ್ಬಂದಿ ವರ್ಗಾವಣೆ ಮಾಡಿಕೊಂಡು ಹೋಗಿದ್ದಾರೆ. ಬೇರೆ ಸಿಬ್ಬಂದಿ ನಿಯೋಜಿಸಬೇಕಿದೆ. ಬೇರೆಡೆಯ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಾಶಿ ‘ಪ್ರಜಾವಾಣಿ’ಗೆ ತಿಳಿಸಿದರು.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ನೆರವಿಗೆ ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ಮಾಡಿದಲ್ಲಿ ಗ್ರಾಮಸ್ಥರು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ. ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಲಿ
- ಶಶಿಕುಮಾರ್ ಗ್ರಾ.ಪಂ. ಸದಸ್ಯ ಗೌರಸಮುದ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.