ಧರ್ಮಪುರ: ಸಮೀಪದ ಬೇತೂರು ಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಎಲ್ಲಿ ನೋಡಿದರೂ ಮದ್ಯದ ಬಾಟಲಿಗಳ ರಾಶಿ. ಕುಡುಕರ ಹಾವಳಿ ತಡಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು.
‘ಗ್ರಾಮದಲ್ಲಿ ಪ್ರತಿ ಅಂಗಡಿಯಲ್ಲೂ ಮದ್ಯ ಮಾತ್ರ ಎಗ್ಗಿಲ್ಲದೆ ಸಿಗುತ್ತದೆ. ಇದರಿಂದ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಆಸ್ಪತ್ರೆ ಮೈದಾನದಲ್ಲಿ ಕುಡುಕರು ಮದ್ಯದ ಬಾಟಲಿಗಳನ್ನು ಎಸೆಯುತ್ತಿದ್ದಾರೆ. ಪ್ರತಿ ನಿತ್ಯ ವಿದ್ಯಾರ್ಥಿಗಳು ಬೆಳಿಗ್ಗೆ ಬಂದ ಕೂಡಲೇ ಮದ್ಯದ ಬಾಟಲಿಗಳನ್ನು ತೆಗೆಯಬೇಕಾದ ಪರಿಸ್ಥಿತಿ ಇದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಲಾ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಕುಡುಕರ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ರಾಮಾಂಜನೇಯ ಆಗ್ರಹಿಸಿದರು.
ಬಳಿಕ ಗ್ರಾಮಸ್ಥರು ಅಬ್ಬಿನಹೊಳೆ ಪೊಲೀಸ್ ಠಾಣೆಗೆ ದೂರು ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಸತೀಶ್, ಗೋವಿಂದರಾಜು, ಚಿದಾನಂದಸ್ವಾಮಿ, ತಿಮ್ಮರಾಜು, ಈರಣ್ಣ, ಶಿವಣ್ಣ, ಗೋವಿಂದಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.