ಹಿರಿಯೂರು: ‘ತಾಲ್ಲೂಕಿನಲ್ಲಿ ಪ್ರತಿ ದಿನ ಅಂದಾಜು 45,000 ಲೀಟರ್ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹೊಸದುರ್ಗ ಮೊದಲ ಸ್ಥಾನ ಪಡೆದರೆ, ಹಿರಿಯೂರು ಎರಡನೇ ಸ್ಥಾನ ಪಡೆದಿದೆ’ ಎಂದು ಶಿಮುಲ್ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿದರು.
ನಗರದ ಹುಳಿಯಾರು ರಸ್ತೆಯಲ್ಲಿರುವ ಅನ್ನಪೂರ್ಣೇಶ್ವರಿ ಹೋಟೆಲ್ ಸಭಾಂಗಣದಲ್ಲಿ ಗುರುವಾರ ನಡೆದ ಚಳ್ಳಕೆರೆ ವಿಭಾಗದ ಹಿರಿಯೂರು ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
‘ಚಿತ್ರದುರ್ಗ, ಹಿರಿಯೂರು ಹಾಗೂ ಚಳ್ಳಕೆರೆ ತಾಲ್ಲೂಕುಗಳಲ್ಲಿ ಹೈನುಗಾರಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಳ್ಳಕೆರೆಯಲ್ಲಿ ಶಿಮುಲ್ ವಿಭಾಗಿಯ ಕಚೇರಿಯನ್ನು ಪ್ರಾರಂಭಿಸಲಾಗಿದೆ. ಹಿರಿಯೂರು ವಿಭಾಗದಲ್ಲಿ ₹ 40 ಲಕ್ಷ ವೆಚ್ಚದಲ್ಲಿ ಮುಂದಿನ ವರ್ಷ ಆಡಳಿತ ಕಚೇರಿ ಕೇಂದ್ರ ನಿರ್ಮಿಸಲಾಗುವುದು. ತಾಲ್ಲೂಕಿನಲ್ಲಿ ಬರಡು ರಾಸು ಚಿಕಿತ್ಸಾ ಶಿಬಿರ ನಡೆಸಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನೂ ಮೂರು ಶಿಬಿರ ನಡೆಸಲಾಗುವುದು’ ಎಂದು ತಿಳಿಸಿದರು.
‘ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಂಡ ಬಳಿಕ ನೀರಾವರಿ ಪ್ರದೇಶ ವಿಸ್ತರಣೆಯಾಗಲಿದ್ದು, ಹೈನುಗಾರಿಕೆ ಬಲಗೊಳ್ಳುವ ನಿರೀಕ್ಷೆಯಿದೆ. ದಾವಣಗೆರೆ ಹಾಗೂ ಚಿತ್ರದುರ್ಗ ಪ್ರತ್ಯೇಕ ಹಾಲು ಒಕ್ಕೂಟ ಮಾಡಲು ₹ 300 ಕೋಟಿ ವೆಚ್ಚದಲ್ಲಿ ಡೇರಿ ನಿರ್ಮಾಣಕ್ಕೆ ಸಿದ್ಧವಾಗಿದ್ದು, ಶ್ರಾವಣ ಮಾಸದಲ್ಲಿ ಭೂಮಿಪೂಜೆ ನೇರವೇರಿಸಿ, ಮುಂದಿನ 2 ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಇದರಿಂದ ಎರಡೂ ಜಿಲ್ಲೆಯ ಹೈನುಗಾರಿಕೆಗೆ ಅನುಕೂಲವಾಗಲಿದೆ’ ಎಂದು ಚಿತ್ರದುರ್ಗದ ಜಿ.ಪಿ. ರೇವಣಸಿದ್ದಪ್ಪ ಮಾಹಿತಿ ನೀಡಿದರು.
ಹೊಳಲ್ಕೆರೆ ಶಿಮುಲ್ ನಿರ್ದೇಶಕ ಜಿ.ಬಿ. ಶೇಖರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಹಾಯಕ ವ್ಯವಸ್ಥಾಪಕ ಎಂ.ಪುಟ್ಟರಾಜು, ವಿಸ್ತರಣಾಧಿಕಾರಿ ಕೃಷ್ಣಕುಮಾರ್, ಪಶುವೈದ್ಯ ಜಿ.ಧೀರಜ್ ಪ್ರಕಾಶ್, ನಿವೃತ್ತ ವಿಸ್ತರಣಾಧಿಕಾರಿ ಕೃಷ್ಣಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.