ಹಿರಿಯೂರು: ತಾಲ್ಲೂಕಿನ ಐಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 24X7 ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಶನಿವಾರ ಆಸ್ಪತ್ರೆ ಪರಿಶೀಲನೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರಿಗೆ ಗ್ರಾಮಸ್ಥರು ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ 48ಕ್ಕೆ ಐಮಂಗಲ ಗ್ರಾಮ ಹೊಂದಿಕೊಂಡಿರುವ ಕಾರಣ ಪದೇಪದೇ ಅಪಘಾತಗಳು ಸಂವಿಸುತ್ತಲೇ ಇರುತ್ತವೆ. ಅಪಘಾತದಲ್ಲಿ ಗಾಯಗೊಂಡವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಅಥವಾ ಹಿರಿಯೂರಿನ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಪ್ರಾಣವೇ ಹೋಗಿರುತ್ತದೆ. ಹಾಗಾಗಿ ಐಮಂಗಲ ಆಸ್ಪತ್ರೆಯಲ್ಲಿಯೇ ತುರ್ತು ಚಿಕಿತ್ಸಾ ಘಟಕ ಆರಂಭಿಸಬೇಕು. ಆಸ್ಪತ್ರೆಯ ಶೌಚಾಲಯ ದುರಸ್ತಿ ಮಾಡಿಸಬೇಕು ಹಾಗೂ ನೂತನ ಸಭಾಂಗಣ ನಿರ್ಮಿಸಿಕೊಡಬೇಕು ಎಂದು ಸ್ಥಳೀಯರು ಮನವಿ ಮಾಡಿದರು.
ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದೇನೆ. ಐಮಂಗಲ ಆಸ್ಪತ್ರೆಗೆ ಕಾಯಕಲ್ಪ ಕಲ್ಪಿಸುವ ಕೆಲಸ ಮಾಡುತ್ತೇನೆ ಎಂದು ಸಚಿವರು ಭರವಸೆ ನೀಡಿದರು.
ಮುಖಂಡರಾದ ಕಲ್ಲಟ್ಟಿ ಹರೀಶ್, ಗಿಡ್ಡೋಬನಹಳ್ಳಿ ಅಶೋಕ್, ಕಂದಿಕೆರೆ ಸುರೇಶ್ ಬಾಬು, ಈರಲಿಂಗೇಗೌಡ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ್, ವಿಜಯ್, ಕಣುಮಪ್ಪ, ಕೆಂಚಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.