ADVERTISEMENT

ಹಿರಿಯೂರು | ಕೆಎಸ್‌ಆರ್‌ಟಿಸಿ ನಿಲ್ದಾಣ ಮೇಲ್ದರ್ಜೆಗೆ: ರಾಮಲಿಂಗಾರೆಡ್ಡಿ ಭರವಸೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 7:04 IST
Last Updated 31 ಆಗಸ್ಟ್ 2025, 7:04 IST
ಹಿರಿಯೂರಿನ ಹುಳಿಯಾರು ರಸ್ತೆಯಲ್ಲಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ ಘಟಕದ ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೆರವೇರಿಸಿದರು
ಹಿರಿಯೂರಿನ ಹುಳಿಯಾರು ರಸ್ತೆಯಲ್ಲಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ ಘಟಕದ ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೆರವೇರಿಸಿದರು   

ಹಿರಿಯೂರು: ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಹಿರಿಯೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮೇಲ್ದರ್ಜೆಗೆ ಏರಿಸಲು ಹಾಗೂ ಧರ್ಮಪುರಕ್ಕೆ ನೂತನ ಬಸ್ ನಿಲ್ದಾಣ ಮಂಜೂರು ಮಾಡುವಂತೆ ಮನವಿ ಮಾಡಿದ್ದು, ಎರಡೂ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

ನಗರದ ಹುಳಿಯಾರು ರಸ್ತೆಯಲ್ಲಿ ಶನಿವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ಬಸ್ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಲ್ಲಿ ಇದೂವರೆಗೆ 500 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದು, ದೇಶದ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು. ಚಿತ್ರದುರ್ಗ ಜಿಲ್ಲೆಯಲ್ಲಿ ಇದೂವರೆಗೆ  5.48 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಶಕ್ತಿ ಯೋಜನೆಯಿಂದ ಮಹಿಳೆಯರಲ್ಲಿ ಆರ್ಥಿಕ ಚೈತನ್ಯ ಮೂಡಿದೆ ಎಂದರು.

ADVERTISEMENT

ಜಿಲ್ಲೆಯಲ್ಲಿ ಇದೀಗ ಹಿರಿಯೂರು ಬಸ್ ಡಿಪೊ ಉದ್ಘಾಟನೆ ಆಗಿದ್ದು , ಶೀಘ್ರದಲ್ಲಿಯೇ ಮೊಳಕಾಲ್ಮೂರು ಮತ್ತು ಹೊಳಲ್ಕೆರೆಗಳಲ್ಲಿ ನಿರ್ಮಿಸಿರುವ ಘಟಕಗಳನ್ನು ಎರಡು ತಿಂಗಳ ಒಳಗೆ ಲೋಕಾರ್ಪಣೆ ಮಾಡುತ್ತೇವೆ. ಚಿತ್ರದುರ್ಗವನ್ನು ಹೊಸ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರಮುಖ ವಿಭಾಗವನ್ನಾಗಿಸುವ ತೀರ್ಮಾನವನ್ನು ಹಿಂದೆ ನಾವೇ ಮಾಡಿದ್ದೆವು. ನೂತನ ಬಸ್ ಘಟಕ ಆರಂಭವಾಗಿರುವ ಕಾರಣ ಈ ಭಾಗದ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಸಾಕಷ್ಟು ಉಪಯೋಗವಾಗಲಿದೆ ಎಂದರು.

ಹಿರಿಯೂರು ಎರಡು ಹೆದ್ದಾರಿಗಳನ್ನು ಸಂಪರ್ಕಿಸುವ ಪ್ರಮುಖ ಸ್ಥಳವಾಗಿದ್ದು, ಬಸ್ ನಿಲ್ದಾಣವನ್ನು ವಿಸ್ತರಿಸಬೇಕಾದ ಅನಿವಾರ್ಯತೆ ಇದೆ. ರೈತ ಸಂಘಟನೆಯವರು ಕೂಡ ಇದೇ ವಿಚಾರಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿದ್ದಾರೆ. ಈ ಘಟಕಕ್ಕೆ ಬೇಡಿಕೆಗೆ ತಕ್ಕಂತೆ ಬಸ್‌ಗಳನ್ನು ಒದಗಿಸಲಾಗುವುದು ಎಂದು ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

2009ರಲ್ಲಿ  ಈ ಜಾಗವನ್ನು ಬಸ್ ಡಿಪೊ ಮಾಡಲು ಇಲಾಖೆಗೆ ಹಸ್ತಾoತರಿಸಲಾಗಿತ್ತು. ಬಹಳ ವರ್ಷಗಳ ನಂತರ ಡಿಪೋ ನಿರ್ಮಾಣಗೊಂಡು ಲೋಕಾರ್ಪಣೆಗೊಳ್ಳುತ್ತಿರುವುದು ಕ್ಷೇತ್ರದ ಜನತೆಗೆ ಸಂತಸ ಉಂಟುಮಾಡಿದೆ. ಆದಷ್ಟು ಬೇಗ ಯಾವ ಮಾರ್ಗದಲ್ಲಿ ಬಸ್ ಓಡಿಸಬೇಕಾದ ಅನಿವಾರ್ಯತೆ ಇದೆ ಎಂಬುದನ್ನು ಪರಿಶೀಲನೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು. ಜನರಿಗೆ ಸೇವೆಯೂ ಸಿಗಬೇಕು. ಸಂಸ್ಥೆಗೂ ನಷ್ಟವಾಗಬಾರದು ಎಂದು ತಿಳಿಸಿದರು.

ಧರ್ಮಪುರ ಗ್ರಾಮ ತಾಲ್ಲೂಕು ಕೇಂದ್ರವಾಗುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದು, ಜೊತೆಗೆ ಹೋಬಳಿ ಕೇಂದ್ರವಾಗಿದೆ. ಅಲ್ಲಿಯೂ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲು ಸಾರಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತಸ ಉಂಟು ಮಾಡಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.

ನೂತನ ಬಸ್ ಘಟಕದ ಒಳಗೆ ಒಮ್ಮೆಲೇ ಎರಡು ಬಸ್ ಬರುವಷ್ಟು ರಸ್ತೆ ಅಗಲವಿಲ್ಲದ ಕಾರಣ, ಸಂಬಂಧಿಸಿದವರ ಜೊತೆ ಈಗಾಗಲೇ ಮಾತನಾಡಿದ್ದು, ಎರಡು ಬಸ್ ಗಳು ಓಡಾಡುವಷ್ಟು ರಸ್ತೆಯನ್ನು ಅಗಲೀಕರಣ ಮಾಡಲಾಗುವುದು. ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ, ರಸ್ತೆ ಅಭಿವೃದ್ಧಿ, ಸಾರಿಗೆ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿ, ಹಿರಿಯೂರು ತಾಲ್ಲೂಕು ಜಿಲ್ಲೆಯಲ್ಲಿಯೇ ವೇಗವಾಗಿ ಬೆಳೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡು ದೊಡ್ಡ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಾಗುತ್ತಿದೆ. ನೂತನ ಬಸ್ ಘಟಕ ಆರಂಭದಿಂದ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ, ಹಣ್ಣು, ತರಕಾರಿ, ಹಾಲು ಉತ್ಪಾದಕರಿಗೆ, ಆಸ್ಪತ್ರೆಗೆ ಬಂದು ಹೋಗುವವರಿಗೆ ಸಹಾಯವಾಗಲಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಆದಿ ಜಾoಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ. ಎಸ್. ಮಂಜುನಾಥ್, ರಾಜ್ಯ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಯೋಗೇಶ್ ಬಾಬು, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಆಕಾಶ್, ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ. ವೆಂಕಟೇಶ್, ನಗರಸಭೆ ಅಧ್ಯಕ್ಷ ಬಾಲಕೃಷ್ಣ, ಉಪಾಧ್ಯಕ್ಷೆ ಮಂಜುಳಾ, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಣ್ಣ, ತಹಶೀಲ್ದಾರ್ ಎಂ. ಸಿದ್ದೇಶ್, ಕೆಎಸ್ಆರ್‌ಟಿಸಿ ನಿರ್ದೇಶಕ ಇಬ್ರಾಹಿಂ ಮೈಗೂರ ಇದ್ದರು.

ಹಿರಿಯೂರಿನಿಂದ ಧರ್ಮಸ್ಥಳ ಬೆಂಗಳೂರಿಗೆ (ತಡೆರಹಿತ) ಹೋಗುವ ಬಸ್ಸುಗಳಿಗೆ ಶನಿವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹಸಿರು ನಿಶಾನೆ ತೋರಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.