ಹಿರಿಯೂರು: ನಗರಸಭೆಯಿಂದ ನಾಯಿಗಳಿಗೆ ರೇಬೀಸ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರಸಭೆ ಆವರಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.
ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದ್ದು, ಮಕ್ಕಳು, ಮಹಿಳೆಯರು, ವೃದ್ಧರು ಬೀದಿಗಳಲ್ಲಿ ನಡೆದಾಡುವುದು ಕಷ್ಟವಾಗುತ್ತಿದೆ ಎಂಬ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ನಾಯಿ ಕಡಿತದಿಂದ ಹರಡುವ ರೇಬೀಸ್ ಕಾಯಿಲೆಯನ್ನು ತಡೆಗಟ್ಟಲು ಪಶುಪಾಲನಾ ಇಲಾಖೆ ಸಹಯೋಗದಲ್ಲಿ ರೇಬೀಸ್ ಲಸಿಕೆ ಹಾಕಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತ ಎ. ವಾಸೀಂ ತಿಳಿಸಿದರು.
ಬೀದಿನಾಯಿಗಳ ಸಂಖ್ಯೆ ಹೆಚ್ಚದಂತೆ ತಡೆಯಲು ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಿಸುವ ಯೋಜನೆ ಇದೆ. ನ್ಯಾಯಾಲಯಗಳ ಆದೇಶದ ಮೇರೆಗೆ ಶ್ವಾನಗಳನ್ನು ಸಂರಕ್ಷಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
‘ಸಾಕು ನಾಯಿಗಳನ್ನು ಹೊಂದಿರುವವರು ತಮ್ಮ ನಾಯಿಗಳಿಗೆ ರೇಬೀಸ್ ಲಸಿಕೆ ಹಾಕಿಸುವುದು ಸುರಕ್ಷತೆಯ ದೃಷ್ಟಿಯಿಂದ ಒಳ್ಳೆಯದು’ ಎಂದು ನಗರಸಭೆ ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ ಸಲಹೆ ನೀಡಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಸದಸ್ಯರಾದ ಶಿವರಂಜನಿ ಯಾದವ್, ವ್ಯವಸ್ಥಾಪಕಿ ಮಂಜುಳಾ, ಆರೋಗ್ಯ ನಿರೀಕ್ಷಕರಾದ ಸಂಧ್ಯಾ, ಮೀನಾಕ್ಷಿ, ಮಹಾಲಿಂಗರಾಜು, ಅಶೋಕ್, ಪಶುವೈದ್ಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಮಹಮದ್ ಹುಸೇನ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.