ಹೊಳಲ್ಕೆರೆ: ಇಲ್ಲಿನ ಪಟ್ಟಣ ಪಂಚಾಯಿತಿ ‘ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ-2020’ಗೆ ಆಯ್ಕೆಯಾಗಿದ್ದು, ರಾಷ್ಟ್ರಮಟ್ಟದಲ್ಲಿ ಪಟ್ಟಣಕ್ಕೆ ಹೆಮ್ಮೆಯ ಗರಿ ಮೂಡಿದೆ.
ಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿರುವುದು ಅಧಿಕಾರಿಗಳು, ಸಿಬ್ಬಂದಿಗೆ ಹರ್ಷ ತಂದಿದೆ. ಆ.20ರಂದು ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
‘ಸ್ವಚ್ಛ ಸರ್ವೇಕ್ಷಣೆ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಬರುವ ಕಾರ್ಯಕ್ರಮ. ಕೇಂದ್ರ ಸರ್ಕಾರದ ತಂಡ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತದೆ. ನಾವು ಸ್ವಚ್ಛತೆಯ ಬಗ್ಗೆ ಕೈಗೊಂಡಿರುವ ಯೋಜನೆಗಳು, ಜಾಗೃತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ನಮ್ಮ ಪಟ್ಟಣ ಪಂಚಾಯಿತಿಯಿಂದ ನೂರಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ವಾಸಿಂ ಸಂತಸ ಹಂಚಿಕೊಂಡರು.
‘ಜಿಲ್ಲಾಧಿಕಾರಿ ಮಾರ್ಗದರ್ಶನ
ದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಸಂಘ, ಸಂಸ್ಥೆಗಳ ನೆರವಿನಿಂದ ‘ಸ್ವಚ್ಛ ಶನಿವಾರ’ ಎಂಬ ವಿನೂತನ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಟ್ಟಣದ ಎಲ್ಲಾ ಬಡಾವಣೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. ಮುಖ್ಯವಾಗಿ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಕಾರ್ಯಕ್ರಮ ನಡೆಸಲಾಗಿತ್ತು. ಪ್ರತಿ ಅಂಗಡಿಯ ಮುಂದೆ ‘ನಮ್ಮ ಅಂಗಡಿಯಲ್ಲಿ ಪ್ಲಾಸ್ಟಿಕ್ ಬಳಸುವುದಿಲ್ಲ’ ಎಂಬ ಫ್ಲೆಕ್ಸ್ ಹಾಕಿಸಲಾಗಿತ್ತು. ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ, ಜಾಗೃತಿ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಮತ್ತಿತರ ಮಾನದಂಡಗಳಿಂದ ಈ ಪ್ರಶಸ್ತಿ ನೀಡಲಾಗಿದೆ. ರಾಜ್ಯದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿರುವ 10 ನಗರ, ಪಟ್ಟಣಗಳಲ್ಲಿ ನಮ್ಮ ಪಟ್ಟಣ ಸೇರಿರುವುದು ಹೆಮ್ಮೆಯ ಸಂಗತಿ’ ಎಂದರು.
ಪಟ್ಟಣದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲಾಗುವುದು. ಚಿಕ್ಕಕೆರೆಯ ಮಧ್ಯದಲ್ಲಿ ₹ 1 ಕೋಟಿ ವೆಚ್ಚದಲ್ಲಿ ಶಿವನ ಪ್ರತಿಮೆ ನಿರ್ಮಿಸಿ, ಪ್ರವಾಸಿ ತಾಣ ಮಾಡಲಾಗುವುದು ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.