ಹೊಸದುರ್ಗ: 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಸದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಶುಕ್ರವಾರ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಪಕ್ಷ ಸಾಮಾಜಿಕ ನ್ಯಾಯದ ಅಡಿಯಲ್ಲಿ ನನಗೆ ಟಿಕೆಟ್ ನೀಡಬೇಕು. ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ’ ಎಂದು ಘೋಷಿಸಿದ್ದಾರೆ.
‘ಕಳೆದ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದ ಕಾರಣ, ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನೇ ಟಿಕೆಟ್ ತ್ಯಾಗ ಮಾಡಿದ್ದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನ ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.
‘15 ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದೇನೆ. ಜಾತ್ಯತೀತವಾಗಿ ಸಾರ್ವಜನಿಕ ಸೇವೆ ಮಾಡಿ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿ ಸೇವೆ ಮಾಡುತ್ತಿದ್ದೇನೆ. ಕಾರ್ಯಕರ್ತರು ಯಾರೂ ಎದೆಗುಂದಬಾರದು. ಮುಂದಿನ ಚುನಾವಣೆಯಲ್ಲಿ ಕಾರ್ಯಕರ್ತರು ಮತ್ತು ಜನಾಭಿಪ್ರಾಯದಂತೆ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದೂ ಅವರು ತಿಳಿಸಿದ್ದಾರೆ.
ಈಚೆಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿಯೂ ಲಿಂಗಮೂರ್ತಿ ಟಿಕೆಟ್ ಕೇಳಿದ್ದರು. ಆದರೆ ಅವರಿಗೆ ಅವಕಾಶ ಒಲಿದಿರಲಿಲ್ಲ. ಪ್ರಸ್ತುತ ಹೊಸದುರ್ಗಕ್ಕೆ ಬಿಜೆಪಿಯ ಗೂಳಿಹಟ್ಟಿ ಶೇಖರ್ ಶಾಸಕರಾಗಿದ್ದು, ಅದೇ ಪಕ್ಷದಿಂದ ಮತ್ತೊಬ್ಬರು ಟಿಕೆಟ್ ಕೇಳಿರುವುದು ಕುತೂಹಲ ಮೂಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.