
ಹೊಸದುರ್ಗ: ‘ಒಂದು ಶಾಲೆ ಉತ್ತಮವಾಗಿ ನಡೆಯಲು ಪೋಷಕರೇ ಆಧಾರ ಸ್ತಂಭಗಳಿದ್ದಂತೆ. ಪೋಷಕರ ಸಹಕಾರದಿಂದ ಶಾಲೆಗಳು ಉತ್ತಮ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಲು ಸಾಧ್ಯ’ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ಹುಳಿಯಾರು ರಸ್ತೆಯಲ್ಲಿನ ಎ.ವಿ.ಎಸ್. ಆಂಗ್ಲ ಮಾಧ್ಯಮ ಐಸಿಎಸ್ಇ ಶಾಲೆಯ ವಾರ್ಷಿಕೋತ್ಸವ ಮತ್ತು ಎವಿಎಸ್ ಉದಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಎವಿಎಸ್ ಶಾಲೆ ಉತ್ತಮ ಶಿಕ್ಷಣ ನೀಡುವ ಮೂಲಕ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳು ಸರಿದಾರಿಯಲ್ಲಿ ಸಾಗಿ ದೇಶಕ್ಕೆ ಉತ್ತಮ ಪ್ರಜೆಗಳಾಗಬೇಕು’ ಎಂದು ಸಲಹೆ ನೀಡಿದರು.
ಸಂಸ್ಥೆಯ ಅಧ್ಯಕ್ಷ ರಾಧಾಕೃಷ್ಣ ಬಿ.ವಿ. ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಈ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಾಗಿದೆ. ಇಲ್ಲಿ ಗುಣಮಟ್ಟದ ಪ್ರಯೋಗಾಲಯ, ಗ್ರಂಥಾಲಯ, ಕಂಪ್ಯೂಟರ್ ಸೌಲಭ್ಯ, ಸುಸಜ್ಜಿತ ಕಟ್ಟಡ, ವಾಹನ ಸೌಲಭ್ಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನುರಿತ ಶಿಕ್ಷಕರಿದ್ದಾರೆ. ವಸತಿಯುತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ತೆರೆಯುವ ಉದ್ದೇಶವಿದೆ’ ಎಂದು ಹೇಳಿದರು.
ಗಂಗಾವತಿ ಪ್ರಾಣೇಶ್ ಮತ್ತು ಸಂಗಡಿಗರು ಹಾಸ್ಯ ಸಂಗಮ ಕಾರ್ಯಕ್ರಮ ನಡೆಸಿಕೊಟ್ಟರು.
ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ತಹಶೀಲ್ದಾರ್ ತಿರುಪತಿ ಪಾಟೀಲ್, ಪೊಲೀಸ್ ಇನ್ಸ್ಪೆಕ್ಟರ್ ಕೆ.ಟಿ. ರಮೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಬಿ. ಮಂಜುನಾಥ್, ನಿರ್ದೇಶಕ ಮಹಾಂತೇಶ್, ಬಿಜೆಪಿ ಕಾರ್ಪೊರೇಟರ್ ಸುರೇಶ್, ಟ್ರಸ್ಟ್ನ ಕಾರ್ಯದರ್ಶಿ ಪ್ರವಲ್ಲಿಕಾ, ಪ್ರಾಂಶುಪಾಲ ಸುಸನ್ ಮೇರಿನಾ ಅಲೆಕ್ಸಾಂಡರ್, ಉದ್ಯಮಿಗಳಾದ ಮಲ್ಲಿಕಾರ್ಜುನ್, ಮಂಜುನಾಥ, ನಿರಂಜನ್ ಸೇರಿದಂತೆ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.