ಹೊಸದುರ್ಗ: ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿಯಲ್ಲಿ ಕಾರ್ಯಾತ್ಮಕ ಗೃಹ ನಳ ಸಂಪರ್ಕದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಆಕಾಶ್ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಸೋಮವಾರ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತು 15 ದಿನಗಳ ಕ್ಷೇತ್ರ ಭೇಟಿ ಪರಿಶೀಲನಾ ಆಂದೋಲನದ ಅಂಗವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆ ಮತ್ತು ಅಂಗನವಾಡಿಗಳಿಗೆ ಕಡ್ಡಾಯವಾಗಿ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಬೇಕು. ಗ್ರಾಮಗಳಲ್ಲಿ ಚರಂಡಿಗಳನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನ ದೇವಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಿಗೆರೆ, ಗುತ್ತಿಕಟ್ಟೆ, ಬಿಸನಹಳ್ಳಿ ಲಂಬಾಣಿಹಟ್ಟಿ, ಹೆಬ್ಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು, ಮಧುರೆ ಗ್ರಾಮ ಪಂಚಾಯಿತಿಯ ಮಧುರೆ, ಚಿನ್ನಾಪುರ ಮತ್ತು ಕೆಲ್ಲೋಡು ಗ್ರಾಮ ಪಂಚಾಯಿತಿಯ ಮೆಟ್ಟಿನಹೊಳೆ ಗ್ರಾಮಕ್ಕೆ ಭೇಟಿ ನೀಡಿ, ಜೆಜೆಎಂ ಯೋಜನೆಯಡಿ ಅಳವಡಿಸಿರುವ ಗೃಹ ನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ ಹಾಗೂ ಎಫ್ಟಿಕೆ–ನೀರಿನ ಗುಣಮಟ್ಟ ಸೇರಿದಂತೆ ಇತರೆ ವರದಿಗಳನ್ನು ಪರಿಶೀಲಿಸಿದರು.
ಕಾರ್ಯಪಾಲಕ ಎಂಜಿನಿಯರ್ ಬಸವನಗೌಡ ಪಾಟೀಲ್, ಜಲಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್. ನಾಡರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಸನ್ನ ಕುಮಾರ್ ಸೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ನೀರುಗಂಟಿಗಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.